ಶಿವಮೊಗ್ಗ ಸ್ಪೋಟ ಪ್ರಕರಣ: ದುರಂತದಲ್ಲಿ ಮಡಿದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಸಿಎಂ | Janata news
ಬೆಂಗಳೂರು : ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಕಳೆದ ರಾತ್ರಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕಲ್ಲು ಕ್ವಾರಿ ಸ್ಪೋಟ ಪ್ರಕರಣದ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ಕೊಟ್ಟಿದ್ದಾರೆ. ಘಟನೆ ಕುರಿತಂತೆ ಮುರುಗೇಶ್ ನಿರಾಣಿಯವರೊಂದಿಗೆ ಮಾತನಾಡಿದ್ದೇವೆ. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಸಚಿವರನ್ನು ಕಳುಹಿಸಿದ್ದೇವೆ. ತನಿಖೆ ನಡೆದ ಮೇಲಷ್ಟೇ ಸಂಪೂರ್ಣ ಚಿತ್ರಣ ಸಿಗಲಿದೆ.
ಈಗಾಗಲೇ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳವನ್ನು ಕರೆಸಲಾಗಿದ್ದು, ತನಿಖೆಗೆ ಸೂಚಿಸಲಾಗಿದೆ. ತನಿಖೆಯ ಬಳಿಕ ಪ್ರಾಥಮಿಕ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾವನ್ನಪ್ಪಿದವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬಿಎಸ್ವೈ ಹೇಳಿದ್ದಾರೆ.
ನಾನು ನಾಳೆ ಅಲ್ಲಿಗೆ ಹೋಗುತ್ತೇನೆ.. ರಾಘವೇಂದ್ರ ಅಲ್ಲಿಯೇ ಇದ್ದಾರೆ. ಅಕ್ರಮ ಗಣಿಗಾರಿಕೆಯಿಂದ ಆಗಿದ್ದರೆ ಈ ಬಗ್ಗೆ ತನಿಖೆ ಮಾಡಲಾಗುತ್ತದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಥಮಿಕ ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು, ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೇವೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.