ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ; ಜಿಲ್ಲೆಗೆ ಪ್ರವಾಸಿಗರು ಬರದಂತೆ ಪೊಲೀಸರ ವಿನಂತಿ! | ಜನತಾ ನ್ಯೂಸ್
ಚಿಕ್ಕಮಗಳೂರು : ಕೋವಿಡ್ ಪರಿಸ್ಥಿತಿಯ ಹಿನ್ನಲೆಯಲ್ಲಿ ನಿಮ್ಮ ಮತ್ತು ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಹಾಗೂ ಜಿಲ್ಲೆಯ ಪಸ್ತುತ ಪರಿಸ್ಥಿತಿಯನ್ನು ಅರಿತು ಜಿಲ್ಲೆಗೆ ಪ್ರವಾಸ ಕೈಗೊಳ್ಳುವುದನ್ನು ಕೈಬಿಡಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಪ್ರವಾಸಿರಲ್ಲಿ ವಿನಂತಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಕೇರಳ, ಮಹಾರಾಷ್ಟ್ರಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿ. ಹೀಗಾಗಿ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ನಿಯಂತ್ರಣ ಅನಿವಾರ್ಯ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತಿಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪ್ರವಾಸಿಗರಲ್ಲಿ ಸೋಂಕು ಪತ್ತೆಯಾದರೆ ಚಿಕಿತ್ಸೆಯೂ ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಪ್ರವಾಸಿಗರು ತಮ್ಮ ಪ್ರವಾಸ ಮುಂದೂಡುವುದು ಒಳ್ಳೆಯದು. ಪ್ರವಾಸಿಗರ ಭೇಟಿಗೆ 72 ಗಂಟೆಯೊಳಗಿನ RTPCR ನೆಗೆಟಿವ್ ವರದಿ ಕಡ್ಡಾಯ. ಸರ್ಕಾರದ ನಿಯಮಗಳನ್ನ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.
ಚಿಕ್ಕಮಗಳೂರು ಜಿಲ್ಲೆಯು ಪ್ರವಾಸಿಗರನ್ನು ಆಕರ್ಷಿಸುವ ತಾಣಗಳನ್ನು ಹೊಂದಿದ್ದು, ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದನ್ನು ಗಮನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದಲೂ ಜಿಲ್ಲೆಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ.
* ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಪ್ರವಾಸಿ ತಾಣಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿರುತ್ತದೆ.
* ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
* ಕೋವಿಡ್ ಸೋಂಕಿನ ಪ್ರಕರಣಗಳು ಪ್ರವಾಸಿಗರಲ್ಲಿ ಪತ್ತೆಯಾದಲ್ಲಿ ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ ನೀಡುವುದು ಕಷ್ಟವಾಗಲಿದೆ.
* ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶವಾಗಿದ್ದು, ಪ್ರಸ್ತುತ ನಿರಂತರವಾಗಿ ಮಳೆಯಾಗುತ್ತಿದೆ.
* ಪ್ರಸ್ತುತ ಸನ್ನಿವೇಶದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಸೂಕ್ತವೆನಿಸುವುದಿಲ್ಲ.
ಈ ಹಿನ್ನಲೆಯಲ್ಲಿ ಪ್ರವಾಸಿಗರಲ್ಲಿ ವಿನಂತಿ ಮಾಡುವುದು ಏನೆಂದರೆ ಜಿಲ್ಲೆಗೆ ಹೊರಗಿನಿಂದ ಆಗಮಿಸುವ ಪ್ರವಾಸಿಗರು ಸದ್ಯದ ಪರಿಸ್ಥಿತಿಯಲ್ಲಿ ತಮ್ಮ ಪ್ರವಾಸವನ್ನು ಮೊಟುಕುಗೊಳಿಸಿ ತಮ್ಮ ಸ್ಥಳದಲ್ಲಿಯೇ ಉಳಿದುಕೊಂಡು ಪರಿಸ್ಥಿತಿ ತಿಳಿಗೊಂಡ ನಂತರದಲ್ಲಿ ಪ್ರವಾಸ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಒಂದು ವೇಳೆ ಪ್ರವಾಸಿಗರು ಮುಂಚಿತವಾಗಿ ಪ್ರವಾಸ ನಿಗದಿ ಮಾಡಿದ್ದಲ್ಲಿ, ವಾಸ್ತವ್ಯಕ್ಕಾಗಿ ಸ್ಥಳ ಕಾಯ್ದಿರಿಸಿದ್ದಲ್ಲಿ 72 ಗಂಟೆಗಳ ಮೊದಲಿನ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ವೈಯಕ್ತಿಕ ಜವಾಬ್ದಾರಿ ಮೇಲೆ ಆಗಮಿಸಬಹುದು ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.