ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ! | ಜನತಾ ನ್ಯೂಸ್
ಕಲಬುರಗಿ : ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ. ಕಾಂಗ್ರೆಸ್ ಅಧ್ಯಕ್ಷರು ಯಡಿಯೂರಪ್ಪನವರ ಪರವಾಗಿ ಸಾಫ್ಟ್ ಕಾರ್ನರ್ ಮಾತುಗಳನ್ನು ಹೇಳಿದ್ದಾರೆ. ಆದರೆ, ನಮಗೆ ಸಾಫ್ಟ್ ಕಾರ್ನರ್ ಅವಶ್ಯಕತೆ ಇಲ್ಲ ಎಂದರು.
ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ಸಾರ್ವಜನಿಕರ ಯೋಗಕ್ಷೇಮಕ್ಕಾಗಿ ಸರ್ಕಾರವನ್ನು ಬೆಂಬಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಾಸ್ತವವಾಗಿ, ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ಸರ್ಕಾರದ ಬಗ್ಗೆ ಮೃದುವಾಗಿ ಮಾತನಾಡಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಸೇರುವ ಬಗ್ಗೆ ಜಿ.ಟಿ.ದೇವೇಗೌಡ ಅವರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ನಾವು ಮುಖಂಡರನ್ನು ಕರೆತರಲು ಬೇರೆ ಪಕ್ಷದ ಮುಖಂಡರ ಮನೆ ಬಳಿ ನಿಂತಿಲ್ಲ. ಕಾಂಗ್ರೆಸ್, ಬಿಜೆಪಿಯವರೇ ಈ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಯಾವಾಗಲೂ ಆಡಳಿತ ಪಕ್ಷದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತದೆ, ಆದರೆ ಆ ಪಕ್ಷ ರಾಜ್ಯ ಮತ್ತು ದೇಶದಲ್ಲಿ ಆಡಳಿತದಲ್ಲಿದ್ದಾಗ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ವಾಗ್ದಾಳಿ ನಡೆಸಿದರು.
ಪ್ರಶ್ನೆಯೊಂದಕ್ಕೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಾನು ಈಗ ನಾನು ಮಾತನಾಡುವುದಿಲ್ಲ, ಆದರೆ ಸೂಕ್ತ ಸಮಯದಲ್ಲಿ ಆ ಬಗ್ಗೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ಕೋವಿಡ್ ಕಾರಣ ಹೋರಾಟ ಮಾಡಲಾಗಿಲ್ಲ. ಅವಶ್ಯಕತೆ ಬಂದಾಗ ಹೋರಾಟಕ್ಕೆ ಧುಮಕುತ್ತಿವೆ. ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
ರಾಜಕಾರಣದಲ್ಲಿ ಇತ್ತೀಚೆಗೆ ಸಿದ್ಧಾಂತಗಳಲ್ಲಿ ಬೆನ್ನು ತಟ್ಟಿಕೊಳ್ಳುವ ಸ್ಥಿತಿ ಇಲ್ಲ. ಮೈಸೂರು ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ ನಮ್ಮ ಜೊತೆ ಮೈತ್ರಿಗೆ ಸಿದ್ದರಿರಲಿಲ್ಲ. ಕಲಬುರಗಿ ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಮುಂದೆ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ಮುಂದೆ ನಿರ್ಧರಿಸುತ್ತೇವೆ ಎಂದರು.