ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ | JANATA NEWS
ಮಂಗಳೂರು : ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ನೀಡಿದೆ.
ಮಂಗಳೂರು ಕೋರ್ಟ್, ಒಂದು ಸೆಕ್ಷನ್ ನಡಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದು ಮತ್ತೊಂದು ಸೆಕ್ಷನ್ ನಡಿ 5 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿ ಆದಿತ್ಯ 2020ರ ಜನವರಿ 20ರಂದು ಮಂಗಳೂರು ಏರ್ ಪೋರ್ಟ್ಗೆ ಬಾಂಬ್ ಇಟ್ಟಿದ್ದ. ಆ ಬಳಿಕ ಜನವರಿ 22ರಂದು ಬೆಂಗಳೂರಿನಲ್ಲಿ ಶರಣಾಗಿದ್ದ.
ಆದಿತ್ಯ ರಾವ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆತನಿಗೆ ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4ರ ಅನ್ವಯ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ, ದಂಡ ತೆರಲು ವಿಫಲವಾದಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ 1967ರ ಸೆಕ್ಷನ್ 16ರ ಅನ್ವಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ, ದಂಡ ತೆರಲು ವಿಫಲವಾದಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಜಿಲ್ಲಾ ನಾಲ್ಕನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ತೀರ್ಪು ವಿಧಿಸಿ ಆದೇಶಿಸಿದ್ದಾರೆ.