ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳಿಸಿದ ಪೋಷಕರು | JANATA NEWS
ಮಂಡ್ಯ : ತಾಳಿ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರೀಕ್ಷೆಗೆ ಕಳುಹಿಸಿದ ಘಟನೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಮಾ.27 ರಂದು ಶ್ರೀರಂಗಪಟ್ಟಣದ ವಿದ್ಯಾರ್ಥಿನಿಗೆ ಕೆ.ಆರ್.ಪೇಟೆ ತಾಲೂಕಿನ ಸಂಬಂಧಿಕ ಯುವಕನೊಂದಿಗೆ ಪೋಷಕರು ಮನೆಯಲ್ಲೇ ಗುಟ್ಟಾಗಿ ಮದುವೆ ಮಾಡಿದ್ದಾರೆ. ನಂತರ ಮಾ.28 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಬರೆಯಲು ತಾಳಿ ಹಾಗೂ ಕಾಲುಂಗುರ ತೆಗೆಸಿ ಕಳುಹಿಸಿದ್ದಾರೆ.
ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ತನ್ನ ಸ್ನೇಹಿತೆಯರಿಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯ ಮದುವೆಯ ಬಗ್ಗೆ ಸ್ನೇಹಿತೆಯರು ಬಹಿರಂಗಗೊಳಿಸಿದ್ದಾರೆ.
ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿ ಮಂಡ್ಯದ ಬಾಲ ಮಂದಿರದಲ್ಲಿದ್ದಾಳೆ.
ಮಾ.18ರಂದು ವಿದ್ಯಾರ್ಥಿನಿಗೆ ಬಾಲ್ಯ ವಿವಾಹ ನಿಶ್ಚಯವಾಗಿರುವ ಬಗ್ಗೆ ಅಧಿಕಾರಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಗಳು ಮಾ.18 ಹಾಗೂ 25 ರಂದು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಪೋಷಕರಿಗೆ ಮದುವೆ ಮಾಡದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.