ಸಂತೋಷ್ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ, ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ: ಈಶ್ವರಪ್ಪ | JANATA NEWS
ಮೈಸೂರು : ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮೃತ ದೇಹ ಉಡುಪಿಯ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ.
ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ನಡುವೆ ಸಂತೋಷ್ ಸಾವಿನ ಬಳಿಕ ಸುದ್ದಿಗಾರರಿಗೆ ಮೊದಲ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ… ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಆತನ ಮೇಲೆ ಮಾನನಷ್ಟ ಕೇಸ್ ಹಾಕಿದ್ದೆ. ಅದಕ್ಕೆ ಕೋರ್ಟ್ ನೋಟಿಸ್ ಕೊಟ್ಟಿದ್ದು, ಅದಕ್ಕೆ ಅವರು ಉತ್ತರಿಸಬೇಕಿತ್ತು. ಅದನ್ನು ಬಿಟ್ಟು ಸತ್ತರೆ ನಾನೇನು ಮಾಡಲಿ? ಎಂದಿದ್ದಾರೆ.
ಈ ಹಿಂದೆ ಸಂತೋಷ್ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣ ದಾಖಲು ಮಾಡಿದ್ದೇವೆ. ಆತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ. ಪ್ರಕರಣ ಸಂಬಂಧ ನಾನು ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.