ಸಿದ್ದರಾಮಯ್ಯ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ: ಡಿ.ಕೆ. ಶಿವಕುಮಾರ್ | JANATA NEWS
ದಾವಣಗೆರೆ : ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವೇಣುಗೋಪಾಲ್, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ರಾಜ್ಯದ ಹಲವೆಡೆಯಿಂದ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗಿಯಾದ ಡಿಕೆ ಶಿವಕುಮಾರ್ ವೇದಿಕೆ ಮೇಲೆ ಸಿದ್ದರಾಮಯ್ಯರನ್ನು ಸನ್ಮಾನಿಸಿದರು. ರೇಷ್ಮೆ ಸಾಲು ಹಾಕಿ, ಇಂದಿರಾ ಗಾಂಧಿ ಅವರ ಬಗೆಗಿನ ಪುಸ್ತಕ ಕೊಟ್ಟು ಹುಟ್ಟುಹಬ್ಬದ ಶುಭಾಶಯ ಕೋರಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದೆ. ಇದೇ ವೇಳೆ ದೇಶದ 75ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸ್ತಿದ್ದೇವೆ. ದೇಶಕ್ಕೂ ಸಂಭ್ರಮ, ಕಾಂಗ್ರೆಸ್ಗೂ ಸಂಭ್ರಮ. ಬಸವ ಜಯಂತಿ ದಿನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಿದ್ದರಾಮೋತ್ಸವ ಕಾರ್ಯಕ್ರಮ ಬಗ್ಗೆ ಹೇಳುತ್ತಿದ್ದಂತೆ ಸಂಭ್ರಮಪಟ್ಟಿದ್ದೆ. ಐತಿಹಾಸಿಕ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ರಾಹುಲ್ಗೆ ಧನ್ಯವಾದಗಳು. ನೀವೆಲ್ಲರೂ ವಿಧಾನಸೌಧದ 3ನೇ ಮಹಡಿಯಲ್ಲಿ ಓಡಾಡಬೇಕಿದೆ. ಇದಕ್ಕೆ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕಿದೆ.
ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ. ಸೋನಿಯಾ ಗಾಂಧಿ ಅವರ ಕೈ ಬಲಪಡಿಸಿ, ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡೋಣ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂದರು.
ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ನಾವುಗಳು ಮುಂದುವರಿಯೋಣ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸೋಣ ಎಂದು ಹೇಳಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಆಗಮಿಸಿದವರಲ್ಲಿ ಮನವಿ ಮಾಡಿದರು.