ರಂಗಭೂಮಿ ಹಿರಿಯ ಕಲಾವಿದ ಬೆಳಗಲ್ಲು ವೀರಣ್ಣ ನಿಧನ | JANATA NEWS
ಬಳ್ಳಾರಿ : ಭೀಕರ ರಸ್ತೆ ಅಪಘಾತದಲ್ಲಿ ಅಂತಾರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರ ಕಾರು ನಿಯಂತ್ರಣ ತಪ್ಪಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಪಲ್ಟಿಯಾಗಿದೆ.
ಘಟನೆಯಲ್ಲಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರು ಮೃತಪಟ್ಟಿದ್ದಾರೆ. ಬೆಳಗಲ್ಲು ವೀರಣ್ಣನವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ರಂಗ ಕಲಾವಿದರು, ಗೊಂಬ ಕಲಾತಂಡದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಅಪಘಾತದಲ್ಲಿ ಬೆಳಗಲ್ಲು ವೀರಣ್ಣನವರ ಪುತ್ರ ಹನುಮಂತಪ್ಪ ಅವರಿಗೂ ಗಾಯಗಳಾಗಿವೆ. ಅವರಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿದ್ದ ನಾಡೋಜ ಬೆಳಗಲ್ಲು ವೀರಣ್ಣ ಸಾವನ್ನಪ್ಪಿದ್ದಾರೆ. ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತೊಗಲು ಗೊಂಬೆಯಾಟ ಎಂಬ ಜಾನಪದ ಕಲೆಗೆ ಹೊಸ ಸ್ಪರ್ಶ ನೀಡಿ, ಹೊಸ ವೈಭವವನ್ನು ಸೃಷ್ಟಿಸಿದ ಖ್ಯಾತ ರಂಗಭೂಮಿ ಮತ್ತು ಜಾನಪದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣನವರು ರಸ್ತೆ ಅಪಘಾತಕ್ಕೀಡಾಗಿ ಇಹಲೋಕ ತ್ಯಜಿಸಿದರು ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ನಿಧನದ ದುಃಖ ತಡೆದುಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.