ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂಸ್
ಮೈಸೂರು : ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಮೀಸಲಾತಿ ಇರಲಿಲ್ಲ. ಮೊದಲ ಬಾರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅಧ್ಯಕ್ಷ ಸ್ಥಾನದ ಮೀಸಲಾತಿ ನೀಡಲಾಯಿತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮುಸ್ಲಿಮ್, ಕ್ರಿಶ್ಚಿಯನ್ನರನ್ನು ಟಾರ್ಗೆಟ್ ಮಾಡಲೆಂದೇ ರಾಜ್ಯದ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನದಲ್ಲಿ ಮತಾಂತರಕ್ಕೆ ಅವಕಾಶವಿದೆ. ಆದರೆ ಬಲವಂತದ ಮತಾಂತರಕ್ಕೆ ಅವಕಾಶ ಇಲ್ಲ, ಆದರೆ ಬಿಜೆಪಿಯವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದಲ್ಲದೆ ಜನಸಾಮಾನ್ಯರ ಸ್ವತಂತ್ರವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕಾಗಿ ಇರುವ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಸ್ಪರ್ಧೆ ಮಾಡುತ್ತಿದ್ದೇವೆ. ಆದರೆ ಬೇರೆ ಯಾವ ಪಕ್ಷವು ಸಾಮಾಜಿಕ ನ್ಯಾಯಕ್ಕಾಗಿ ಸ್ಪರ್ಧೆ ಮಾಡುತ್ತಿಲ್ಲ. ನಮ್ಮ ಪಕ್ಷದಲ್ಲಿ ವಯಸ್ಸಾದವರಿಗೆ, ಯುವಕರಿಗೆ ಸೇರಿದಂತೆ ಎಲ್ಲರಿಗೂ ಸ್ಪರ್ಧೆಗೆ ಅವಕಾಶ ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಎರಡು ಪಕ್ಷಗಳು ಮೀಸಲಾತಿ ವಿರೋಧಿ ಪಕ್ಷಗಳಾಗಿದ್ದು, ಸ್ಥಳೀಯ ಸಂಸ್ಥೆಗಳಿಗೆ ಏನು ಕೊಡುಗೆ ನೀಡಿಲ್ಲ. ಇದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು ಎಂದರು.
ರಾಜೀವ್ ಗಾಂಧಿ ಪ್ರಧಾನಮಂತ್ರಿ ಆಗುವವರಗೆ ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇರಲಿಲ್ಲ. ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಮೀಸಲಾತಿ ಇರಲಿಲ್ಲ. ಮೊದಲ ಬಾರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅಧ್ಯಕ್ಷ ಸ್ಥಾನದ ಮೀಸಲಾತಿ ನೀಡಲಾಯಿತು.
ಹಿಂದೂತ್ವದಲ್ಲಿ ಸಮಾನತೆ ಇಲ್ಲ ಎಂದೇ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಹಾಗಾಗಿ ಅವರವರಿಗೆ ಯಾವ ಧರ್ಮದಲ್ಲಿ ನಂಬಿಕೆ ಇದಿಯೊ ಆ ಧರ್ಮವನ್ನು ಅನುಸರಿಸುವುದರಲ್ಲಿ ತಪ್ಪೇನು ಇಲ್ಲ ಎಂದು ಹೇಳಿದರು.
ಮೇಕೆದಾಟು ಯೋಜನೆ ಜಾರಿ ಮಾಡಬೇಕೆಂದು ಮೇಕೆದಾಟುವಿನಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟಿರುವುದು ಡಿ.ಕೆ.ಶಿವಕುಮಾರ್ ಅಲ್ಲ, ಇದು ಪಕ್ಷದ ತೀರ್ಮಾನ. ಹಾಗಾಗಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳು ಭಾಗವಹಿಸುತ್ತೇವೆ. ಬಿಜೆಪಿಯವರಿಗೆ ಏಕೆ ಅನುಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.