ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ | Janata news
ಮೈಸೂರು : ರಥೋತ್ಸವ ಹಿನ್ನೆಲೆಯಲ್ಲಿ ಅ.28 ರ ಸಂಜೆ 6 ರಿಂದ ಅ.29 ರ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಅವಧಿಯಲ್ಲಿ ದರ್ಶನ ಪಡೆಯಲು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೇ, ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ತೆರಳುವುದನ್ನೂ ನಿಷೇಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.
ಅ.29ರಂದು ಬೆಳಿಗ್ಗೆ 9.45ರಿಂದ 10.05ರವರೆಗೆ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ. ಹೀಗಾಗಿ, ಜನದಟ್ಟಣೆ ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ.
ದಸರಾ ಉತ್ಸವಕ್ಕೆ ಗ್ರಾಮಸ್ಥರು ಮತ್ತು ಅಧಿಕಾರಿಗಳಿಗೆ ಮಾತ್ರ ಪ್ರವೇಶ ವಿನಾಯಿತಿ ಇರುತ್ತದೆ. ಜನಸಮೂಹವನ್ನು ಒಳಗೊಂಡಂತೆ ನಡೆಯುತ್ತಿದ್ದ ದಸರಾ ರಥೋತ್ಸವ ಈ ಬಾರಿ ಭಕ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅವಕಾಶವಿಲ್ಲ. ಸಾಂಪ್ರದಾಯಿಕವಾಗಿ ಸರಳವಾಗಿ ಉತ್ಸವ ನಡೆಯಲಿದೆ.
ಅಲ್ಲದೆ ಆ ದಿನಗಳಂದು ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು, ವಿತರಿಸುವುದನ್ನು ನಿಷೇಧಿಸಲಾಗಿದೆ.
ದೇವಾಲದಲ್ಲಿ ಜರುಗುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.