ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ, ನೀವೇ ಸಿಎಂ ಅಂತಾ ಮನೆ ಬಾಗಿಲಿಗೆ ಬಂದಿದ್ದರು: ಕುಮಾರಸ್ವಾಮಿ! | Janata news
ಬೆಂಗಳೂರು : ಈಗ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಮುಖ್ಯಮಂತ್ರಿ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ ಎಂದು ದುಂಬಾಲು ಬಿದ್ದಿದ್ದನ್ನು ಇಡೀ ರಾಜ್ಯ ನೋಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.
ಜೆಡಿಎಸ್ ಪಕ್ಷದಿಂದ ಬೆಳೆದು ಬೆನ್ನಿಗೆ ಚೂರಿ ಹಾಕಿದ ಸಿದ್ದರಾಮಯ್ಯ ಜೆಡಿಎಸ್ ಪಕ್ಷಕ್ಕೆ ಹೀರೋ ಆಗಲು ಸಾಧ್ಯವೇ ಇಲ್ಲ. ಅವರು ಎಂದಿಗೂ ವಿಲನ್. ಕಾಂಗ್ರೆಸ್ ಪಕ್ಷದ ಒಂದು ವರ್ಗಕ್ಕೂ ಸಿದ್ದರಾಮಯ್ಯ ವಿಲನ್ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮುಂದೆ ಕೂಡ ಸಿದ್ದರಾಮಯ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತ ಸ್ಥಿತಿಗೆ ಬರುವ ಕಾಲ ಬಹಳ ದೂರವಿಲ್ಲ ಎಂದರು.
ಜೆಡಿಎಸ್ ಬಡವರು, ಶ್ರಮಿಕರು, ರೈತರು ಬೆಳೆಸಿದ ಪಕ್ಷ. ನಮ್ಮ ಹೊಣೆಗಾರಿಕೆ ಏನಿದ್ದರೂ ಜನರದ್ದು, ನಾವು ಅಂಬಾನಿ, ಆದಾನಿಗೆ ನಮ್ಮ ಪಕ್ಷದ ಜವಾಬ್ದಾರಿ ನೀಡಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ನಾವು ಟಿಕೆಟ್ ನೀಡಿದ್ದೇವೆ. ಜೆಡಿಎಸ್ನ್ನು ಯಾರು ಕೊಂಡುಕೊಳ್ಳುವುದಕ್ಕೆ ಆಗಲ್ಲ ಎಂದರು.
ಕೊರೋನಾ ಬಂದಾಗ ಪ್ರಧಾನಿ ಮೋದಿ ಚಪ್ಪಾಳೆ ತಟ್ಟಿ ಅಂದ್ರು, ಆಮೇಲೆ ದೀಪ ಬೆಳಗಿಸಿ ಅಂದ್ರು. ಆ ದೀಪ ಹಚ್ಚಿ ಬಿಜೆಪಿಯವರು ತಮ್ಮ ಜೀವನ ಬೆಳಗಿಸಿಕೊಂಡ್ರು. ಜನ ರ ಕಷ್ಟಗಳಿಗೆ ದೀಪ ಹಚ್ಚಿ ಬೆಳಕು ನೀಡಲಿಲ್ಲ ಎಂದ ಅವರು, ಹತ್ತು ವರ್ಷದಿಂದ ಬಿಜೆಪಿ ಕಾಂಗ್ರೆಸ್ನವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಪ್ರತಿವರ್ಷ ಕಾಲುವೆ ದುರಸ್ಥಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಆದರೂ, ಮಳೆ ಬಂದಾಗ ಬೆಂಗಳೂರಿನ ಅನೇಕ ಪ್ರದೇಶಗಳಿಗೆ ನೀರು ನುಗ್ಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಸಭೆಗೆ ಅಡ್ಡಿಪಡಿಸಿದವರನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ರಾತ್ರಿವರೆಗೂ ಪ್ರತಿಭಟನೆ ನಡೆಸುವ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ತಮ್ಮ ಶಾಸಕರ ಮನೆ, ಪೊಲೀಸ್ ಠಾಣೆ ಸುಟ್ಟವರನ್ನು ಬಂಧಿಸಿ ಎಂದು ಧರಣಿ ನಡೆಸಬೇಕಿತ್ತು ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ನಾನು ನೊಂದಿದ್ದೇನೆ. ಬಡ ಕುಟುಂಬಗಳ ರಕ್ಷಣೆಗಾಗಿ ರಾಜಕಾರಣಕ್ಕೆ ಬಂದಿದ್ದೇನೆ ಎಂದು ಹೇಳುತ್ತಾರೆ. ಆದರೆ, ಹಳ್ಳಿಯಲ್ಲಿರುವ ಡಿ.ಕೆ.ರವಿ ಅವರ ತಂದೆ-ತಾಯಿಯನ್ನೇ ನೋಡಲಿಲ್ಲ. ಅವರ ಬದುಕಿಗೆ ಒಂದು ದಾರಿ ಮಾಡಿ ಕೊಡಲಾಗಲಿಲ್ಲ. ಈಗ ನಿಮ್ಮ ಕಷ್ಟಗಳನ್ನೆಲ್ಲಾ ಕೇಳ್ತಾರಾ, ಸಮಸ್ಯೆಗಳನ್ನು ಬಗೆಹರಿಸ್ತಾರಾ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.