ಮಹದಾಯಿ ವಿಚಾರದಲ್ಲಿ ಕರ್ನಾಟಕ ತಪ್ಪು ಮಾಡಿದ್ದು ಸಾಬೀತುಪಡಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ! | Janata news
ಬೆಳಗಾವಿ : ಮಹದಾಯಿ ವಿಚಾರದಲ್ಲಿ ಕರ್ನಾಟಕ ಯಾವತ್ತೂ ಕಾನೂನು ಉಲ್ಲಂಘನೆ ಮಾಡಿಲ್ಲ. ನಾವು ಹಾಗೆ ಮಾಡಿದ್ದೇವೆ ಎಂದು ಸಾಬೀತು ಪಡಿಸಿದರೆ ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಆರೋಪಕ್ಕೆ ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಗೋವಾ ಸಿಎಂ ಮಹದಾಯಿ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ರಮೇಶ್ ಜಾರಕಿಹೊಳಿ, ಗೋವಾದವರು ಮಹದಾಯಿ ವಿಷಯದಲ್ಲಿ ಮೊದಲಿಂದಲೂ ರಾಜಕಾರಣ ಮಾಡುತ್ತ ಬಂದಿದ್ದಾರೆ. ಅವರ ರಾಜಕಾರಣಕ್ಕೆ ನಾವು ತಲೆಕೆಡಿಸಿಕೊಳ್ಳುವದಿಲ್ಲ, ಗೋವಾ ಸಿಎಂಗೆ ಆಹ್ವಾನ ಮಾಡುತ್ತೇನೆ, ಅವರು ಬಂದು ಕಾಮಗಾರಿ ಸ್ಥಳ ನೋಡಲಿ ಎಂದು ಬೆಳಗಾವಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಕರ್ನಾಟಕದವರು ಮಹದಾಯಿ ನೀರನ್ನು ತಿರುಗಿಸಿಕೊಂಡಿರುವದರಿಂದ ನದಿಯಲ್ಲಿ ನೀರಿನ ಅಭಾವ ಉಂಟಾಗಿದೆ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿರುವದರಲ್ಲಿ ಯಾವುದೇ ಸತ್ಯಾಂಶವಿಲ್ಲ. ತಮ್ಮ ಆರೋಪ ಸಾಬೀತು ಪಡಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ತಿರುಗೇಟು ನೀಡಿದರು.