ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ವಿಧಿವಶ: ಮುಖ್ಯಮಂತ್ರಿ ಬಿಎಸ್ ವೈ ಸಂತಾಪ! | Janata news
ಉಡುಪಿ : ನಾಡಿನ ಹಿರಿಯ ವಿದ್ವಾಂಸ ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ (84) ಭಾನುವಾರ ಬೆಳಗ್ಗೆ 11ಗಂಟೆಗೆ ಅಂಬಲಪಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಹಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹೆಚ್ಚು ಪ್ರವಚನಗಳಿಗೆ ಹಾಜರಾಗದೆ ಮನೆಯಲ್ಲೇ ಇದ್ದು ಆಚಾರ್ಯತ್ರಯರ ಭಾಷ್ಯ ಒಳಗೊಂಡ ಭಗವದ್ಗೀತೆಯ ರಚನಾ ಕಾರ್ಯದಲ್ಲಿ ಮಗ್ನರಾಗಿದ್ದರು.
1936ರಲ್ಲಿ ಉಡುಪಿಯ ಅಂಬಲಪಾಡಿಯಲ್ಲಿ ಹುಟ್ಟಿದ ಗೋವಿಂದಾಚಾರ್ಯರು ಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದರು. ಈ ಎರಡೂ ಭಾಷೆಗಳಲ್ಲಿ ಅವರು ಅನೇಕ ಕೃತಿಗಳನ್ನೂ ಬರೆದಿದ್ದಾರೆ. ಅವರಿಗೆ 2009ರಲ್ಲಿ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿಯೂ ಲಭಿಸಿತ್ತು.
ವಿದ್ಯಾವಾಚಸ್ಪತಿ ಎಂದೇ ಕರೆಯಲ್ಪಡುವ ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು, ಸಾಹಿತಿಗಳು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ವೇದ, ಪುರಾಣಗಳ ಕುರಿತ ಅವರ ಪ್ರವಚನಗಳು, ಕೃತಿಗಳು ಹಾಗೂ ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತ ಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆ ಯೊಂದನ್ನು ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಯನ್ನು ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.