ಚುನಾವಣೆ ದಿನವೇ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿ! | Janata news
ಧಾರವಾಡ : ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ನಡೆಯುತ್ತಿದ್ದ ಸಮಯದಲ್ಲೇ ಅಭ್ಯರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 2ನೇ ವಾರ್ಡ್ನ ಅಭ್ಯರ್ಥಿ ದಾಮೋದರ ಯಲಿಗಾರ (25) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ದಾಮೋದರ ಯಲಿಗಾರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿದ್ದ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಇಂದು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಗರಗ ಗ್ರಾಮ ಪಂಚಾಯತಿಗೂ ಕೂಡ ಮತದಾನ ನಡೆಯುತ್ತಿದೆ. ಗರಗ ಗ್ರಾಮದಲ್ಲಿನ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲಿನ ಭೀತಿಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.
ಇನ್ನು ಹದಿನೈದು ದಿನಗಳಲ್ಲಿ ಪತ್ನಿಯ ಹೆರಿಗೆ ಇತ್ತು. ಇವೆಲ್ಲದರ ನಡುವೆ ದಾಮೋದರ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ತಿಳಿದುಬಂದಿಲ್ಲ. ಇದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ಘಟನೆಯ ಸುದ್ಧಿ ತಿಳಿಯುತ್ತಿದಂತೆ ಗ್ರಾಮಸ್ಥರು ಮನೆ ಮುಂದೆ ಜಮಾವಣೆಯಾಗಿದ್ದು, ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.