ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸದ ಕೆಲವರು ದೆಹಲಿಯಲ್ಲಿ ಪ್ರಜಾಪ್ರಭುತ್ವದ ಪಾಠ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ | Janata news
ನವದೆಹಲಿ: : ದೆಹಲಿಯ ಕೆಲವು ವ್ಯಕ್ತಿಗಳು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ಕೇಂದ್ರಾಡಳಿತ ಪ್ರದೇಶದ ಎಲ್ಲಾ ನಿವಾಸಿಗಳಿಗೆ ವಿಸ್ತರಿಸಲು ವಿಡಿಯೋ-ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳನ್ನು ನಡೆಸದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದ ಪಾಠ ಒಪ್ಪಿಸುತ್ತಿದೆ ಎಂದು ವಿಪಕ್ಶಕ್ಕೆ ತಿರುಗೇಟು ಕೊಟ್ಟರು. ಅಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಇದೇ ಮೊದಲ ಬಾರಿಗೆ ಮೂರು ಹಂತದಲ್ಲಿ ಇಲ್ಲಿ ಚುನಾವಣೆ ನಡೆದಿದೆ.
ದೆಹಲಿಯ ಕೆಲವು ವ್ಯಕ್ತಿಗಳು ಯಾವಾಗಲೂ ಟೀಕಿಸುತ್ತಾ ನನ್ನ ಅವಮಾನಿಸುತ್ತಿದ್ದಾರೆ. ಅವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಅವರು ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸಲಿಲ್ಲ ಏಕೆ? ಎಂದು ಕೇಳಿದ್ದಾರೆ. ನಾನು ಅವರಿಗೆ ಜಮ್ಮು-ಕಾಶ್ಮೀರದ ಡಿಡಿಸಿ ಚುನಾವಣೆಯನ್ನೇ ಪ್ರಜಾಪ್ರಭುತ್ವದ ಉದಾಹರಣೆಯನ್ನಾಗಿ ತೋರಿಸುತ್ತೇನೆ.
ಕೆಲವು ರಾಜಕೀಯ ಶಕ್ತಿಗಳು ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡುತ್ತಲೇ ಇರುತ್ತವೆ ಆದರೆ, ಅವರ ದ್ವಂದ್ವತೆ ಮತ್ತು ಪವಿತ್ರತೆಯನ್ನು ನೋಡಿ ಎಂದು ಕುಟುಕಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುವ ಪಕ್ಷವು ಸುಪ್ರೀಂ ಕೋರ್ಟ್ನ ಆದೇಶದ ಹೊರತಾಗಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಿಲ್ಲ, ಆದರೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ವರ್ಷದೊಳಗೆ ಪಂಚಾಯತ್ ಮಟ್ಟದ ಚುನಾವಣೆಗಳನ್ನು ನಡೆಸಲಾಯಿತು ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಿವೆ ಎಂದ ಪ್ರಧಾನಿ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಅಭಿನಂದನೆಗಳನ್ನು ತಿಳಿಸಿದರು.