ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ನಲ್ಲಿ ಸಿಲಿಂಡರ್ ಸ್ಪೋಟ, ಕರಾವಳಿ ರಕ್ಷಣಾ ಪಡೆಯಿಂದ ಮೀನುಗಾರರ ರಕ್ಷಣೆ! | Janata news
ಮಂಗಳೂರು : ಸಮುದ್ರದ ಮಧ್ಯೆ ಮೀನುಗಾರಿಕೆ ಸಂದರ್ಭ ದೋಣಿಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡು ಅಪಾಯದಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ಬೋಟಿನಲ್ಲಿದ್ದ 11 ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಗಾಯಗೊಂಡ ಓರ್ವ ಮೀನುಗಾರ ಹಾಗೂ ಮೀನುಗಾರರನ್ನು ನವಮಂಗಳೂರು ಬಂದರಿಗೆ ಕರೆತರಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ನೌಕೆ ಮಂಗಳೂರಿನಿಂದ 140 ನಾಟಿಕಲ್ ಮೈಲಿ ಪಶ್ಚಿಮದಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಆ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಬೋಟ್ನಲ್ಲಿ ಬೆಂಕಿ ಆವರಿಸಿದೆ. ಈ ಬಗ್ಗೆ ದೋಣಿಯವರಿಂದ ಅಪಾಯದ ಸಂದೇಶ ಕೋಸ್ಟ್ಗಾರ್ಡ್ಗೆ ತಲಪಿದೆ.
ತಕ್ಷಣವೇ ಮುಂಬೈ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕಾಗಿ ಕಳುಹಿಸಲಾಯಿತು. ಅಪಾಯಕ್ಕೆ ಸಿಲುಕಿದ್ದ ಬೋಟ್ನ ತ್ವರಿತ ಪತ್ತೆಗಾಗಿ ಡಾರ್ನಿಯರ್ ವಿಮಾನವನ್ನೂ ಕಳುಹಿಸಲಾಯಿತು.
ಘಟನೆ ಬಗ್ಗೆ ಮಾಹಿತಿ ನೀಡಿರುವ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ದೋಣಿಯಲ್ಲಿದ್ದ ಸಿಲಿಂಡರ್ ಸ್ಫೋಟವಾಗಿದ್ದು, ಭಾರತೀಯ ಕರಾವಳಿಯ ರಕ್ಷಣಾ ಪಡೆಯವರು ಎಲ್ಲಾ 11 ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.