ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ! | Janata news
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡದ ಹೈಕೋರ್ಟ್ ವಜಾ ಮಾಡಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯ ವಿಚಾರಣೆ ನಿನ್ನೆ(ಜ.20)ಯಿಂದ ನಡೆದಿತ್ತು. ವಿನಯ ಕುಲಕರ್ಣಿ ಪರವಾಗಿ ನ್ಯಾಯವಾದಿ ಶಶಿಕಿರಣ ಶೆಟ್ಟಿ ಅವರು ವಾದ ಮಂಡಿಸಿದ್ದರು. ಇಂದು ಹೈಕೋರ್ಟ್ ನ್ಯಾಯಾಧೀಶ ಕೆ.ಎನ್. ನಟರಾಜ ವಾದವನ್ನು ಆಲಿಸಿದ ಬಳಿಕ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿದ್ದಾರೆ.
ಕಳೆದ ನವೆಂಬರ್ 5 ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನ ಸಿಬಿಐ ಬಂಧನ ಮಾಡಿತ್ತು. ಇದಾದ ನಂತರ ಧಾರವಾಡ ಜಿಲ್ಲಾ ಪ್ರಧಾನ ಮತ್ತು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಅಲ್ಲಿ ಕೂಡ ಇವರಿಗೆ ಜಾಮೀನು ಸಿಕ್ಕಿರಲಿಲ್ಲ.
ಈ ಆದೇಶ ಪ್ರಶ್ನಿಸಿ ನಂತರ ಹೈಕೋರ್ಟ್ ಮೊರೆ ಹೋಗಿದ್ದರು. ಅನೇಕ ಬಾರಿ ಅರ್ಜಿಯ ವಿಚಾರಣೆ ಮುಂದೂಡುತ್ತ ಬಂದಿತ್ತು. ಇಂದು ವಿಚಾರಣೆ ಸಂಪೂರ್ಣಗೊಳಿಸಿರುವ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ. ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಿದೆ.