ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಸದಸ್ಯೆ ಮಗನ ಕಗ್ಗೊಲೆ | Janata news
ರಾಯಚೂರು : ಗ್ರಾಮ ಪಂಚಾಯಿತಿ ಚುನಾವಣೆಯ ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಗ್ರಾಪಂ ಸದಸ್ಯೆಯ ಪುತ್ರನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದ ಶರಣಬಸವ (28) ಕೊಲೆಯಾದ ದುರ್ದೈವಿ. ಈತನ ತಾಯಿ ಹನುಮಂತಮ್ಮ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ನಡೆದ ಗ್ರಾಪಂ ಚುನಾವಣೆಯಲ್ಲಿ ಶರಣಬಸವನ ಕುಟುಂಬದ ಬಳಿ ಚುನಾವಣೆಗೆ ಸ್ಪರ್ಧಿಸದಂತೆ ಕೇಳಿಕೊಂಡಿದ್ದ ಜಗದೀಶ ಕುಟುಂಬಸ್ಥರು, ಆದರೆ ಶರಣಬಸವ ಕುಟುಂಬ ಚುನಾವಣೆಯಿಂದ ಹಿಂದೆ ಸರಿದಿರಲಿಲ್ಲ. ಚುನಾವಣೆಯಲ್ಲಿ ಸೋತ ಹಿನ್ನೆಲೆ ದ್ವೇಷದಿಂದ ಸೋತ ಜಗದೀಶ್ ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾದವರ ಮಗನನ್ನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ.
ಸೋಮವಾರ ರಾತ್ರಿ ಗ್ರಾಪಂ ಸದಸ್ಯೆ ಹನುಮಂತಮ್ಮನ ಮನೆ ಬಳಿ ಬಂದ 10 ಜನರ ಗುಂಪೊಂದು ಮಾರಕಾಸ್ತ್ರದಿಂದ ದಾಳಿ ಮಾಡಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶರಣಬಸವ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಹನುಮಂತಮ್ಮ, ಅಮರೇಶ ಗಾಯಗೊಂಡಿದ್ದು, ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಜಗದೀಶ್ ಸೇರಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.