ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಎದುರು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ! | ಜನತಾ ನ್ಯೂಸ್
ಹುಬ್ಬಳ್ಳಿ : ಡೆತ್ನೋಟ್ ಬರೆದಿಟ್ಟು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಗರಗ ಗ್ರಾಮದಲ್ಲಿ ವಾಸಿಸುತ್ತಿರುವ ಮಹಿಳೆ ಶ್ರೀದೇವಿ ವೀರಪ್ಪ ಕಮ್ಮಾರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಮೃತರು. ಕಳೆದ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾಗಿ ಶ್ರೀದೇವಿ ಮನೆ ಬಿದ್ದಿತ್ತು. ಪರಿಹಾರಕ್ಕಾಗಿ ಶೀದೇವಿ ಅಲೆದಾಡಿದರೂ ಪ್ರಯೋಜನ ಆಗಿರಲಿಲ್ಲ. ಮನೆ ಹಾನಿ ಪರಿಹಾರಕ್ಕಾಗಿ ಐದು ತಿಂಗಳಿಂದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿಗೆ ಶ್ರೀದೇವಿ ಮನವಿ ಮಾಡಿದ್ದರಂತೆ. ಸರಿಯಾಗಿ ಸ್ಪಂದನೆ ಸಿಗದಿದ್ದಕ್ಕೆ ಮನನೊಂದಿದ್ದರು ಎನ್ನಲಾಗಿದೆ.
ಮಹಿಳೆ ವಿಷ ಸೇವಿಸುವ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಇದರಲ್ಲಿ ಕಳೆದ 5-6 ತಿಂಗಳುಗಳಿಂದ ನಾನು ಎಷ್ಟು ಪ್ರಯತ್ನಿಸಿದರೂ ಸಂಸದರನ್ನು ಭೇಟಿಯಾಗಲು ಆಗಲಿಲ್ಲ. ಶಾಸಕ ಅಮೃತ್ ದೇಸಾಯಿ ಅವರನ್ನು ಭೇಟಿಯಾದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡದೆ, ಸಂಸದರನ್ನು ಭೇಟಿ ಮಾಡುವಂತೆ ಹೇಳಿದ್ದರು ಎಂದು ಉಲ್ಲೇಖಿಸಲಾಗಿತ್ತು.
ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.