ಸಾರ್ವಜನಿಕರ ಮೇಲೆ ಲಾಠಿ ಎತ್ತಬೇಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ | ಜನತಾ ನ್ಯೂಸ್
ಬೆಂಗಳೂರು : ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್ಡೌನ್ ಜಾರಿಗಾಗಿ ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡುವುದು ಬೇಡ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರೊಬ್ಬರು ಪೀಠಕ್ಕೆ ಮಾಹಿತಿ ನೀಡಿ, ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್ಡೌನ್ ನಿಯಮಗಳನ್ನು ಜಾರಿಗೊಳಿಸಲು ಸಿಕ್ಕಸಿಕ್ಕವರ ಮೇಲೆ ಲಾಠಿ ಪ್ರಹಾರ ಮಾಡುತ್ತಿದ್ದಾರೆ. ಕೋವಿಡ್ ರೋಗಿಯೊಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ಲಾಕ್ಡೌನ್ ಜಾರಿ ಮಾಡುವಾಗ ಸಾರ್ವಜನಿಕರ ಮೇಲೆ ಲಾಠಿ ಬಳಸದೇ ಪೊಲೀಸರು ಸಂಯಮದಿಂದ ವರ್ತಿಸಬೇಕು. ಕೆಲವೆಡೆ ಕೊವಿಡ್ ಸೋಂಕಿತರಿಗೂ ಲಾಠಿಚಾರ್ಜ್ ಮಾಡಿದ ವರದಿಯಿದೆ. ಪೊಲೀಸರು ಸಾರ್ವಜನಿಕರ ಮೇಲೆ ಇಂತಹ ವರ್ತನೆ ಪ್ರದರ್ಶಿಸಬಾರದು ಎಂದ ಕೋರ್ಟ್, ಸಂಯಮ ಪ್ರದರ್ಶಿಸಲು ಪೊಲೀಸರಿಗೆ ಸೂಚನೆ ನೀಡಿದೆ. ಜತೆಗೆ ಪೊಲೀಸರಿಗೆ ಸೂಕ್ತ ಮಾರ್ಗಸೂಚಿ ನೀಡಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಸಂಪೂರ್ಣ ವ್ಯಾಕ್ಸಿನೇಷನ್ಗೆ ನೀಲನಕ್ಷೆ ರೂಪಿಸುವಂತೆ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 2ನೇ ಲಸಿಕೆ ಡೋಸ್ ಕೊರತೆ ಗಂಭೀರ ಪರಿಸ್ಥಿತಿ ಸೃಷ್ಟಿಸಿದೆ. ರಾಜ್ಯ, ಕೇಂದ್ರ ಸರ್ಕಾರಗಳು ತಕ್ಷಣ ಕ್ರಮಕೈಗೊಳ್ಳಬೇಕು. ವ್ಯಾಕ್ಸಿನ್ ಕೊರತೆಯ ಸಮಸ್ಯೆ ಬಗೆಹರಿಸಬೇಕು. ಸದ್ಯ 26 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ಒದಗಿಸಬೇಕು. ಕೈಗೊಂಡ ಕ್ರಮದ ಬಗ್ಗೆ ಮೇ 13ರಂದು ಉತ್ತರಿಸಿ ಎಂದು ಹೈಕೋರ್ಟ್ನ ವಿಭಾಗೀಯ ಪೀಠ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ.