ಹೆಣ್ಣು ಮಗುವಿಗೆ ಜನ್ಮ ನೀಡಿ ಕೋವಿಡ್ ಸೋಂಕಿತೆ ಸಾವು | ಜನತಾ ನ್ಯೂಸ್
ಮಂಡ್ಯ : ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್ ಸೋಂಕಿತ ಗರ್ಭಿಣಿ ಮೃತಪಟ್ಟಿರುವ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದ ಗುಣಶ್ರೀ (35) ಸಾವಿಗೀಡಾದ ಮಹಿಳೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನ ಉಪನ್ಯಾಸಕಿಯಾಗಿದ್ದ ಗುಣಶ್ರೀ, ಮದ್ದೂರು ತಾಲೂಕಿನ ಅರೆತಿಪ್ಪೂರು ಗ್ರಾಮದ ನಿವಾಸಿ ಮನೋಹರ್ ಅವರೊಂದಿಗೆ ವಿವಾಹವಾಗಿದ್ದರು.
ಮದುವೆಯಾಗಿ 4 ವರ್ಷಗಳಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಏಳೂವರೆ ತಿಂಗಳ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಇತ್ತಿಚೆಗೆ ಕರೊನಾ ಸೋಂಕು ತಗುಲಿತ್ತು.
ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅಲ್ಲಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಮಹಿಳೆ ಪ್ರಾಣಕ್ಕೆ ಅಪಾಯವಿದೆ ಎಂದು ಹೇಳಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ಹೆರಿಗೆಯಾದ ಎರಡು ದಿನಗಳ ಬಳಿಕ ಅಂದರೆ ನಿನ್ನೆ ಮೃತಪಟ್ಟಿದ್ದಾರೆ. ಸದ್ಯ ಮಗು ಆರೋಗ್ಯವಾಗಿದೆ.