ಮೃತ ಕರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ವಿಳಂಬ: ಮುಖ್ಯಮಂತ್ರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ | ಜನತಾ ನ್ಯೂಸ್
ಬೆಂಗಳೂರು : ಸರ್ಕಾರ ಕರೊನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬಸ್ಥರಿಗೆ ಕೂಡಲೇ ಪರಿಹಾರ ವಿತರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿಗಳ ತಳಮಟ್ಟದ ಸಿಬ್ಬಂದಿ, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜತೆ ಇದ್ದು ಕೆಲಸ ಮಾಡುತ್ತಿದ್ದಾರೆ.
ಇವರುಗಳಿಗೆ ವಿಶೇಷ ರಕ್ಷಣೆಯನ್ನು ನೀಡಬೇಕಾದುದು ಸರ್ಕಾರದ ಪ್ರಧಾನ ಜವಾಬ್ದಾರಿ. ಆದರೆ ಸರ್ಕಾರ ಇನ್ನೂ ಹಲವು ಇಲಾಖೆಗಳ ಸಿಬ್ಬಂದಿಯನ್ನು ಕರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿಲ್ಲ. ಈಗಾಗಲೇ ಕರೊನಾ ವಾರಿಯರ್ಸ್ ಎಂದು ಘೋಷಿಸಿರುವವರಿಗೆ ಕಳೆದ ಎರಡ್ಮೂರು ತಿಂಗಳಿಂದ ಸಂಬಳವನ್ನೂ ನೀಡಿಲ್ಲ.
ಆಶಾ ಕಾರ್ಯಕರ್ತೆಯರು ನೇರವಾಗಿ ರೋಗಿಗಳ ಸಂಪರ್ಕದಲ್ಲಿರುತ್ತಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಸರ್, ಅಗತ್ಯ ಔಷಧಗಳು ಮುಂತಾದವುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದ ಸಿದ್ದರಾಮಯ್ಯ, ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹಲವರು ಮರಣ ಹೊಂದಿದ್ದಾರೆ. ಅವರಲ್ಲಿ ಬಹುತೇಕರ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅವರೆಲ್ಲರಿಗೂ ಕೂಡಲೇ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.
ಸಿಬ್ಬಂದಿಗಳಿಗೆ ಮಾರ್ಚ್ ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ಕೊರೊನಾ ಕಾಲದಲ್ಲೂ ಸಂಬಳ ನೀಡದಿರುವುದು ಅತ್ಯಂತ ಅಮಾನವೀಯ. ಕೂಡಲೇ ಎಲ್ಲರಿಗೆ ಸಂಬಳ ಬಿಡುಗಡೆ ಮಾಡಬೇಕು.
ದೇಶದ ರಾಜ್ಯಗಳಲ್ಲೇ ಆರ್ಥಿಕ ಸ್ಥಿತಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಇರುವ ಕರ್ನಾಟಕದಲ್ಲಿ ಕನಿಷ್ಠ ಮಾಸ್ಕ್, ಸ್ಯಾನಿಟೈಸರ್ ನೀಡುವಷ್ಟು ಹೃದಯವಂತಿಕೆ, ಕರ್ತವ್ಯ ಪ್ರಜ್ಞೆ, ಉದಾರತೆಗಳನ್ನು ಆಡಳಿತ ನಡೆಸುವ ಸರ್ಕಾರ ಕಳೆದುಕೊಂಡಿರುವುದು ಅತ್ಯಂತ ಬೇಜವಾಬ್ದಾರಿಯುತವಾದ ಹಾಗೂ ಅವಮಾನಕರವಾದ ಸಂಗತಿ. ಆದ್ದರಿಂದ ಕೂಡಲೇ ಅವರ ಬೇಡಿಕೆ ಪರಿಗಣಿಸಿ ಈಡೇರಿಸಬೇಕು.
ಸೂಕ್ತವಾದ, ಗೌರವಯುತವಾದ ಸಂಬಳ, ಗೌರವಧನ, ಸಂಭಾವನೆಯನ್ನು ಹೆಚ್ಚಿಸಬೇಕು. ಕೊರೊನಾದಂಥ ಮಾರಣಾಂತಿಕ ಸೋಂಕನ್ನು ನಿಭಾಯಿಸುವಲ್ಲಿ ಮಾನವ ಸಂಪನ್ಮೂಲದ ಪಾತ್ರ ಬಹಳ ದೊಡ್ಡದು. ಅವರುಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಬೇಕಾದುದು ಸರ್ಕಾರದ ಜವಾಬ್ದಾರಿ ಎಂದು ಭಾವಿಸಿ ಕೂಡಲೇ ಈಡೇರಿಸಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.