ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಖ್ಯ, ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ | ಜನತಾ ನ್ಯೂಸ್
ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಮುಖ್ಯ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ.
ಕರೊನಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಎರಡೇ ದಿನದಲ್ಲಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ, ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್ನ ಸಿಂಗ್ರೇಗೌಡ ಎಂಬುವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವಂತೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನೂ ರದ್ದು ಮಾಡಿ, ಎಲ್ಲಾ ವಿದ್ಯಾರ್ಥಿಗಳನ್ನೂ ಉತ್ತೀರ್ಣಗೊಳಿಸುವಂತೆ ಕೋರಿದ್ದರು.
ಇಂದು ಅರ್ಜಿದಾರರ ಹಾಗೂ ಸರ್ಕಾರದ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯನ್ನು ವಜಾ ಮಾಡಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಕ್ಕೆ ಅನುವು ಮಾಡಿಕೊಟ್ಟಿದೆ.
ಜಸ್ಟೀಸ್ ಬಿವಿ ನಾಗರತ್ನ ಹಾಗೂ ಜಸ್ಟೀಸ್ ಎಚ್ ಸಂಜೀವ್ ಕುಮಾರ್ ಅವರಿದ್ದ ನ್ಯಾಯಪೀಠವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ, ಸರ್ಕಾರ ಕೈಗೊಂಡ ಮಾರ್ಗಸೂಚಿಗಳು ಸಮರ್ಪಕವಾಗಿದೆ ಎಂದು ಪರಿಗಣಿಸಿದೆ, 2ನೇ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ ಎಂದು ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು ಎಂಬ ವಾದವನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ಕೊರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ನಡೆಗೆ ಸಚಿವ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಇದು ಭರವಸೆ ಮೂಡಿಸಿದ ತೀರ್ಪು. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಉಚ್ಚ ನ್ಯಾಯಾಲಯವು ಪಿಐಎಲ್ ಅನ್ನು ತಿರಸ್ಕರಿಸಿದೆ. ಅದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.
ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ನ್ಯಾಯಾಲಯಕ್ಕೆ ಕರ್ನಾಟಕ ಸರ್ಕಾರ ತಿಳಿಸಿದೆ.
ಕಳೆದ ವರ್ಷ 8 ಲಕ್ಷ ಮಂದಿ ಎಸ್ಎಸ್ಎಲ್ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್ಎಸ್ಎಲ್ಸಿ ಪರೀಕ್ಷೆಗೆ ಬಳಸಲಾಗಿತ್ತು. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋವಿಡ್ 19 ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸಕ್ಕೆ ಹೆಚ್ಚಿಸಲು ಅಣಕು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.