ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಪ್ರಮಾಣ ವಚನ ಸ್ವೀಕಾರ! | ಜನತಾ ನ್ಯೂಸ್
ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ. ಒಕ್ಕಲಿಗ ಸಮುದಾಯದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ ಎನ್ನಲಾಗಿದೆ.
ಬಸವರಾಜ ಬೊಮ್ಮಾಯಿ ಅವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲು ಸದ್ಯ ಕಾರ್ಯಕ್ರಮ ನಿಗದಿಯಾಗಿದೆ. ಆದರೆ ದೆಹಲಿಯಿಂದ ಸೂಚನೆ ಬಂದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು ಹಾಗೂ ಆರ್. ಅಶೋಕ್ ಅವರೂ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟ ವಿಸ್ತರಣೆಯತ್ತ ಗಮನ ಹರಿಸಲಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಒಂದೇ ಬಾರಿಗೆ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎನ್ನಲಾಗಿದೆ.
ದೆಹಲಿ ನಾಯಕರ ಜೊತೆ ಸಂಪರ್ಕ ಹೊಂದಿರುವ ಹಲವು ಬಿಜೆಪಿ ಮುಖಂಡರು ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಕಸರತ್ತು ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಿಂದ ನಾಲ್ಕು ಬಾರಿ ಶಾಸಕರಾಗಿರುವ ಅರಗ ಜ್ಞಾನೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಮತ್ತು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.
"ಜನಪರ ಆಡಳಿತ ನೀಡುವೆ, ನಂಬಿಕೆ ಹುಸಿಗೊಳಿಸಲ್ಲರೈತ, ಬಡವರು, ಹಿಂದುಳಿದವರು, ದೀನ ದಲಿತರ ರಕ್ಷಣೆ ಸರ್ಕಾರದ ಮೇಲಿದೆ. ಕೋವಿಡ್ 19 ಬಗ್ಗೆ ಮೊದಲಿಗೆ ಗಮನ ಹರಿಸಬೇಕಿದೆ" ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.