ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಹುಕ್ಕಾ ಬಾರ್, ಇಂದಿರಾ ಕ್ಯಾಂಟೀನ್ ತೆರೆಯಲಿ: ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ | ಜನತಾ ನ್ಯೂಸ್
ಬೆಂಗಳೂರು : ಕಾಂಗ್ರೆಸ್ ಕಚೇರಿಯಲ್ಲಿ ಬೇಕಾದರೆ ಇಂದಿರಾ ಕ್ಯಾಂಟೀನ್ ಆದರೂ ತೆರೆಯಲಿ, ನೆಹರು ಹೆಸರಿನಲ್ಲಿ ಹುಕ್ಕಾ ಬಾರ್ ಬೇಕಾದರೂ ತೆರೆಯಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗುರುವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದಿಂದ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸುವಂತೆ ಮುಖ್ಯಮಂತ್ರಿ ಸಲಹೆ ನೀಡಿದ್ದೇನೆ. ಆ ಕುರಿತು ಚರ್ಚೆ ನಡೆಯಲಿದೆ ಎಂದರು.
1984ರಲ್ಲಿ ಇಂದಿರಾ ಗಾಂಧಿ ಹತ್ಯೆ ನಡೆದಿದೆ. 2017-18ರಲ್ಲಿ ಇಂದಿರಾ ಗಾಂಧಿ ಕ್ಯಾಂಟೀನ್ ಆರಂಭಿಸಲಾಯಿತು. ಕಾಂಗ್ರೆಸ್ನವರು ಇಂದಿರಾ ಗಾಂಧಿ ಅವರ ಮೇಲೆ ಪ್ರೇಮದಿಂದ ಈ ಕ್ಯಾಂಟೀನ್ ಆರಂಭಿಸಿಲ್ಲ. ಅದು ರಾಜಕಾರಣಕ್ಕಾಗಿ ಮತ್ತು ದುಡ್ಡು ಹೊಡೆಯಲು ಮಾಡಿದ ನಿರ್ಧಾರ. ಬದ್ಧತೆಗಾಗಿ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.
ಇಂದಿರಾ ಕ್ಯಾಂಟೀನ್ ವಿಚಾರವಾಗಿ ಪ್ರತಿಕ್ರಿಯಿಸಿದ ರಾಷ್ಟ್ರೀಯ ಬಿಜೆಪಿ ಕಾರ್ಯದರ್ಶಿ ಸಿ.ಟಿ.ರವಿ.. ನೆಹರೂ ಅವರು ಮೊದಲ ಪ್ರಧಾನಮಂತ್ರಿ.. ಒಳ್ಳೆಯ ಕೆಲಸಗಳನ್ನ ಮಾಡಿದ್ದಾರೆ ಒಪ್ಪಿಕೊಳ್ಳೋಣ.. ಅದರ ಜೊತೆಗೆ ಕೆಲವು ಎಡಬಿಡಂಗಿ ಕೆಲಸಗಳನ್ನೂ ಮಾಡಿದ್ದಾರೆ. ಅದನ್ನ ಆರ್ಟಿಕಲ್ 370 ಮೂಲಕ ಸರಿಪಡಿಸಲಾಗಿದೆ ಎಂದಿದ್ದಾರೆ.
ಇಂದಿರಾಗಾಂಧಿಯವರ ಹತ್ಯೆಯಾಗಿದ್ದು 1984. ಅವರ ಕ್ಯಾಂಟೀನ್ ಮಾಡಿದ್ದು 2017-18 ರಲ್ಲಿ. ಯಾತಕ್ಕೆ ಮಾಡಿದ್ದು..? ಇಂದಿರಾ ಗಾಂಧಿ ಅವರ ಮೇಲಿನ ಪ್ರೇಮಕ್ಕಾ..? ಮಾಡಿದ್ದು ರಾಜಕಾರಣ ಮಾಡೋಕೆ. ಬದ್ಧತೆ ಇದ್ದಿದ್ರೆ ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮಾಡಬೇಕಿತ್ತು. ಇಂದಿರಾ ಕ್ಯಾಂಟೀನ್ ಮಾಡಿದ್ದು ದುಡ್ಡು ಹೊಡೆಯೋಕೆ.. ನಾಲ್ಕು ಕಾಂಕ್ರೀಟ್ ಕಂಬ ನೆಡೋದಕ್ಕೆ 1 ಕೋಟಿ 30 ಲಕ್ಷ ಖರ್ಚು ಮಾಡಿದ್ದಾರೆ. ಅದೇನು ಫೈವ್ ಸ್ಟಾರ್ ಹೋಟೆಲ್ಲಾ..? ಇದಕ್ಕಾಗಿ ನಾವು ವಿರೋಧಿಸುತ್ತೇವೆ.
ಇಂದಿರಾ ಗಾಂಧಿ ಅವರ ಎಲ್ಲ ನಿರ್ಧಾರಗಳನ್ನು ವಿರೋಧಿಸುವ ಪೂರ್ವಗ್ರಹ ಪೀಡಿತ ಮನಸ್ಥಿತಿ ನಮ್ಮದಲ್ಲ. ಆದರೆ, ದೇಶಕ್ಕೆ ನೆಹರೂ, ಇಂದಿರಾ ಗಾಂಧಿ ಮಾತ್ರ ಕೊಡುಗೆ ಕೊಟ್ಟಿದ್ದಾರೆ ಎಂದರೆ ಅವರ ಗುಲಾಮರು ಮಾತ್ರ ಒಪ್ಪಿಕೊಳ್ಳಲು ಸಾಧ್ಯ. ಸ್ವಾತಂತ್ರ್ಯ ಲಭಿಸಲು ಅವರು ಮಾತ್ರ ಕೊಡುಗೆ ಕೊಟ್ಟಿದ್ದಾರೆ ಎಂದರೆ ಮೂರ್ಖರು ಮತ್ತು ಗುಲಾಮರು ಮಾತ್ರ ಒಪ್ಪಿಕೊಳ್ಳುತ್ತಾರೆ. ನಾವು ಮೂರ್ಖರು ಮತ್ತು ಗುಲಾಮರಲ್ಲ ಎಂದು ರವಿ ಹೇಳಿದರು.
217 ಯೋಜನೆಗಳಿಗೆ ಅವರ ಹೆಸರು ಇಡಲಾಗಿದೆ. ಹಾಗಿದ್ದರೆ ಬೇರೆ ಯಾರೂ ದೇಶಕ್ಕೆ ಕೊಡುಗೆ ನೀಡಿಲ್ಲವೇ? ಅನ್ನಪೂರ್ಣೇಶ್ವರಿ ರಾಜಕೀಯ ವ್ಯಕ್ತಿಯಲ್ಲ. ಅನ್ನದ ದೇವತೆ. ಬಡವರಿಗೆ ಅನ್ನಪೂರ್ಣೇಶ್ವರಿ ಹೆಸರಿನಲ್ಲಿ ಅನ್ನ ಕೊಟ್ಟರೇನು? ಇಂದಿರಾ ಹೆಸರಲ್ಲಿ ಅನ್ನ ಕೊಟ್ಟರೇನು? ಜನರ ತೆರಿಗೆಯಿಂದ ಅನ್ನ ಕೊಡುವುದಲ್ಲವೇ. ನೆಹರೂ ಅವರ ಒಳ್ಳೆಯ ತೀರ್ಮಾನಗಳನ್ನು ನಮ್ಮ ಪಕ್ಷ ಒಪ್ಪಿಕೊಳ್ಳಲಿದೆ. ಆದರೆ, ಕೆಲವು ಎಡೆಬಿಡಂಗಿತನ ಮಾಡಿದ್ದಾರೆ. ಅವುಗಳನ್ನು ಸರಿಪಡಿಸುವ ಕೆಲಸವನ್ನು 370ನೇ ವಿಧಿ ರದ್ದು ಮಾಡುವ ಮೂಲಕ ಮಾಡಲಾಗಿದೆ ಎಂದು ಅವರು ಹೇಳಿದರು.