ದೇಶದಲ್ಲಿರುವುದು ನೀಚ ರಾವಣ ಸರ್ಕಾರ, ಅನ್ನದಾತರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ! | ಜನತಾ ನ್ಯೂಸ್
ಬೆಂಗಳೂರು : ದೇಶದಲ್ಲಿ ನೀಚ ರಾವಣ ಸರಕಾರ ಅಧಿಕಾರ ನಡೆಸುತ್ತಿದ್ದು, ಅನ್ನದಾತರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಒಂದು ತಿಂಗಳು ಗಡುವು ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ನೀರಾವರಿ ಯೋಜನೆ ವಿಳಂಬವಾಗುತ್ತಿದೆ. ಹಣಕಾಸು ಸಮಸ್ಯೆ ಇದೆಯೇ? ರೈತರ ಹೋರಾಟ ಹತ್ತಿಕ್ಕುವ ಕೆಲಸ ಆಗುತ್ತಿದೆ. ಮೇಕೆದಾಟು ತಮಿಳುನಾಡಿಗೆ ಹಕ್ಕು ಇಲ್ಲ ಎಂದ ಮೇಲೆ ನಿಮಗೆ ಬದ್ಧತೆ ಇಲ್ಲವೇ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದರು.
ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ನೋಡಿ ಜನ ಆತಂಕಪಡುತ್ತಿದ್ದಾರೆ. ದೇಶದಲ್ಲಿ ಅನ್ನದಾತನಿಗೆ ರಕ್ಷಣೆ ಇಲ್ಲವಾಗಿದೆ. ತನ್ನ ರಕ್ಷಣೆಗಾಗಿ ನಿರಂತರ ಹೋರಾಟ ಮಾಡುತ್ತಿರುವ ಅನ್ನದಾತರ ಮೇಲೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರು ರೈತರನ್ನು ಕಗ್ಗೊಲೆ ಮಾಡಲಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ಸಚಿವ ಅಜಯ್ ಮಿಶ್ರಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರೈತರ ಹತ್ಯೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 302 ಪ್ರಕಾರ ಕೊಲೆ ಮೊಕದ್ದಮೆ ದಾಖಲು ಮಾಡಿ, ಬಂಧಿಸಬೇಕು. ಮಿಶ್ರಾ ಅವರನ್ನೂ ಬಂಧಿಸಬೇಕು. ಹತ್ಯೆಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.