ಹಾನಗಲ್ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರಗೆ ಸ್ಥಾನ! | ಜನತಾ ನ್ಯೂಸ್
ಬೆಂಗಳೂರು : ಕರ್ನಾಟಕದ ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆ ಉಸ್ತುವಾರಿಗಳ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೆಸರಿಲ್ಲ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.
ಉಪ ಚುನಾವಣಾ ಜವಾಬ್ದಾರಿ ನೀಡದಿರುವುದಕ್ಕೆ ವಿಜಯೇಂದ್ರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದರು. ವಿಜಯೇಂದ್ರ ಅವರ ರಾಜಕೀಯ ಏಳಿಗೆ ಸಹಿಸದೆ ತುಳಿಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.
ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿ.ವೈ. ವಿಜಯೇಂದ್ರ, ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದೂ ಸೇರಿದಂತೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ನಾನು ಕಟಿಬದ್ಧನಾಗಿದ್ದೇನೆ. ಪಕ್ಷದ ಗೆಲುವೇ ನಮಗೆ ಮುಖ್ಯ. ಭಿನ್ನಾಭಿಪ್ರಾಯದಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ. ಇದರಿಂದ ವಿಪಕ್ಷಗಳಿಗೆ ಪರೋಕ್ಷವಾಗಿ ಸಹಾಯ ಮಾಡಿದಂತಾಗುತ್ತದೆ. ಯಾರೂ ಈ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬೇಡಿ ಎಂದಿದ್ದರು.
ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಕೋರ್ ಕಮಿಟಿ ಸಭೆ ನಿರ್ಧಾರದಂತೆ ಉಸ್ತುವಾರಿಗಳ ತಂಡವನ್ನು ರಚಿಸಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಈ ಹಿಂದೆ ನಡೆದ ಉಪ ಚುನಾವಣೆಗಳಲ್ಲಿ ಗಣನೀಯ ಸಾಧನೆ ಮಾಡಿ ಪಕ್ಷ ಸಂಘಟಿಸಿ ಸಾಮರ್ಥ್ಯ ಸಾಬೀತುಪಡಿಸಿರುವ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹೆಸರು ಉಸ್ತುವಾರಿಗಳ ಪಟ್ಟಿಯಲ್ಲಿ ಇರಲಿಲ್ಲ.
ಇದೀಗ ಬಿಜೆಪಿ ಹೊಸದಾಗಿ ಬಿಡುಗಡೆ ಮಾಡಿರುವ ಹಾನಗಲ್ ಉಪಚುನಾವಣೆಯ 13 ಉಸ್ತುವಾರಿಗಳ ಪಟ್ಟಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರು ಕೂಡ ಸೇರ್ಪಡೆಯಾಗಿದೆ.
ಬಿ.ವೈ. ವಿಜಯೇಂದ್ರ ಅವರ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ. ಬಿ.ಸಿ. ಪಾಟೀಲ್, ಜೆ.ಸಿ. ಮಾಧುಸ್ವಾಮಿ, ಶಿವರಾಮ್ ಹೆಬ್ಬಾರ್, ಸಂಸದ ಶಿವಕುಮಾರ್ ಉದಾಸಿ ಮುಂತಾದ ನಾಯಕರ ಹೆಸರನ್ನು ನಮೂದಿಸಲಾಗಿದೆ. ಸಿಂಧಗಿ ಉಪಚುನಾವಣೆಯ ಬಿಜೆಪಿ ಉಸ್ತುವಾರಿಗಳಾಗಿ ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ ಮುಂತಾದವರಿದ್ದಾರೆ.