ಚಿತ್ರರಂಗದ ಹಿರಿಯ ನಟ ಇನ್ನಿಲ್ಲ, ಅಗಲಿಕೆಗೆ ಸಂತಾಪ ಸೂಚಿಸಿದ ಚಿತ್ರರಂಗ ಹಾಗು ರಾಜಕೀಯ ನಾಯಕರು! | ಜನತಾ ನ್ಯೂಸ್
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಪೋಷಕ ನಟ ಸತ್ಯಜಿತ್ ಇಂದು ಇಹಲೋಕ ತ್ಯಜಿಸಿದ್ದಾರೆ.
ಸತ್ಯಜಿತ್ ಗೆ 72 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಗಡೆ ನಗರದ ಶಬರಿ ನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 1.30ರ ನಂತರ ಸತ್ಯಜಿತ್ ಅಂತ್ಯಕ್ರಿಯೆ ನಡೆಯಲಿದೆ.
986ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, 650ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅಪ್ಪು, ಅರಸು, ಅಭಿ, ಆಪ್ತಮಿತ್ರ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು. ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿದ್ದು, ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆದಿದ್ದರು.
ಸತ್ಯಜಿತ್ ಅವರಿಗೆ ಈ ಮೊದಲು ಗ್ಯಾಂಗ್ರಿನ್ ಆಗಿತ್ತು. ಹೀಗಾಗಿ, ಅವರ ಕಾಲನ್ನು ಕತ್ತರಿಸಲಾಗಿತ್ತು. ಹೀಗಾಗಿ, ವ್ಹೀಲ್ಚೇರ್ ಮೇಲೆಯೇ ಅವರು ಕುಳಿತಿರುತ್ತಿದ್ದರು. ಒಂದು ವರ್ಷದ ಹಿಂದೆ ಸತ್ಯಜಿತ್ ಅವರು ಪುನೀತ್ ಮನೆಗೂ ಆಗಮಿಸಿದ್ದರು. ಆ ದಿನವನ್ನು ಅಪ್ಪು ನೆನೆದಿದ್ದಾರೆ.
ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.
ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಸತ್ಯಜಿತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶಿಸಿದ್ದಾರೆ.
ಸಂಸದ ಡಿ.ಕೆ ಸುರೇಶ್ ಸಹ ಟ್ವೀಟ್ ಮಾಡಿ ಸತ್ಯಜಿತ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಕುಟುಂಬ ಮತ್ತು ಬಂಧುಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕಲೆಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ನಟ ಸತ್ಯಜಿತ್ ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತೇನೆ ಎಂದಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ನಿಧನಕ್ಕೆ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಖಳನಾಯಕ, ಪೋಷಕನಟ ಸೇರಿದಂತೆ ವೈವಿಧ್ಯಮಯ ಪಾತ್ರಗಳಲ್ಲಿ 600 ಕ್ಕೂ ಹೆಚ್ಷು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ತಮ್ಮ ನಟನೆಯ ಮೂಲಕ ಜನರ ಹೃದಯವನ್ನು ಗೆದ್ದಿದ್ದರು. ತಮ್ಮ ಕಲಾಸೇವೆಯಿಂದಾಗಿ ಅವರ ಹೆಸರು ಕನ್ನಡ ಸಾಂಸ್ಕೃತಿಕ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿರುತ್ತದೆ ಎಂದಿದ್ದಾರೆ. ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.