ಬಿಡಿಎ ಮೇಲೆ ಎಸಿಬಿ ದಾಳಿ: ಅಕ್ರಮವೆಸಗಿರುವ ನೂರಾರು ಕೋಟಿ ದಾಖಲೆಗಳು ವಶ! | ಜನತಾ ನ್ಯೂಸ್
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿ ಮೇಲೆ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಶನಿವಾರ ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದೆಡೆ ಬಿಡಿಎ ಕಚೇರಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ಬೀಗ ಹಾಕಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ದಾಳಿ ಮುಂದುವರೆಯಲಿದ್ದು, ದೊರೆತ ಸಾಕ್ಷ್ಯಧಾರಗಳ ಮೇಲೆ ವಿಚಾರಣೆಗಾಗಿ ಬಿಡಿಎ ಅಧಿಕಾರಿಗಳು ವಶಕ್ಕೆ ಪಡೆಯಲಾಗುವುದು ಎಂದು ಎಸಿಬಿ ಹೇಳಿಕೆಯಲ್ಲಿ ತಿಳಿಸಿದೆ.
ಬಿಡಿಎ ಅಭಿವೃದ್ಧಿಪಡಿಸಿರುವ ಅರ್ಕಾವತಿ, ಕೆಂಪೇಗೌಡ, ವಿಶ್ವೇಶ್ವರಯ್ಯ, ಕೆಂಗೇರಿ, ಉಳ್ಳಾಲ, ಸ್ಯಾಟಲೈಟ್ ವ್ಯಾಪ್ತಿಯಲ್ಲಿರುವ ಬಡಾವಣೆಗಳ ನಿವೇಶನಗಳನ್ನು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಅನರ್ಹ ವ್ಯಕ್ತಿಗಳಿಗೆ ನೋಂದಣಿ ಮಾಡಿದ್ದಾರೆ. ಮಧ್ಯವರ್ತಿಗಳ ಜತೆ ಸೇರಿಕೊಂಡು ಹಲವರಿಗೆ ಸಾವಿರಾರು ಚದರ ಅಡಿ ಜಾಗ ಮಂಜೂರು ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ.
ಬಿಡಿಎ ಅಧಿಕಾರಿ ಮತ್ತು ಸಿಬ್ಬಂದಿ ಶಾಮೀಲಾಗಿ ಬೆಲೆಬಾಳುವ ಈ ನಿವೇಶನಗಳನ್ನು ಅನರ್ಹ ವ್ಯಕ್ತಿಯೊಬ್ಬರಿಗೆ ಸಿಗುವಂತೆ ಮಾಡಲಾಗಿರುವ ಹಲವು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.
ಅಕಾರ್ವತಿ ಲೇಔಟ್, ಕೆಂಪೇಗೌಡ ಲೇಔಟ್, ಚಂದ್ರ ಲೇಔಟ್ ಮತ್ತಿತರ ಕಡೆಗಳಲ್ಲಿ ಅಕ್ರಮವಾಗಿ ಬಿಡಿಎ ನಿವೇಶನ ಹಂಚಿಕೆ ಮಾಡಿರುವುದನ್ನು ಕೂಡಾ ಕಂಡುಬಂದಿದೆ ಎನ್ನಲಾಗಿದೆ.
ಸಂಬಂಧಪಟ್ಟ ದಾಖಲೆಗಳು ಮತ್ತು ನೊಂದಣಿ ಸಹಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಷ್ಟೇ ಅಲ್ಲದೇ ಸರಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಮಾಲಿಕತ್ವ ಹೊಂದಿರುವಂತೆ ಅಕ್ರಮ ದಾಖಲಾತಿಗಳನ್ನು ಸೃಷ್ಟಿಸಿರುವ ಬಿಡಿಎ ಅಧಿಕಾರಿ ಮತ್ತು ಸಿಬ್ಬಂದಿಗಳು, ಖಾಸಗಿ ವ್ಯಕ್ತಿಗಳೊಂದಿಗೆ ಕೂಡಿಕೊಂಡು ಕೊಟ್ಯಂತರ ರೂ. ಮೌಲ್ಯದ ಪರಿಹಾರ ಧನವನ್ನು ತಮ್ಮವರಿಗೆ ನೀಡಿದ್ದಾರೆ ಎನ್ನಲಾಗಿದೆ.
ಈ ವಂಚಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಮಂಗಳವಾರ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಎಸಿಬಿ ತಿಳಿಸಿದೆ.