ಉಕ್ರೇನ್ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು? | ಜನತಾ ನ್ಯೂಸ್
ಬೆಂಗಳೂರು : ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರ್ಕಾರ ಉಕ್ರೇನ್ನಿಂದ ಭಾರತದ ವಿದ್ಯಾರ್ಥಿಗಳನ್ನು ಏರ್ಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಬಂದಿರುವ ಆ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಗತಿಯೇನು? ಎಂದು ಸರಣಿ ಟ್ವೀಟ್ ಮೂಲಕ ಕೇಳಿದ್ದಾರೆ.
ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ.. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ.
ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ. 2,65,720 ಕೋಟಿ ರೂ.ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರವೇ ನೀಡಲಿ. ನೀಟ್ ಮೂಲಕ ಶೇ.50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.