ಇಂದು ಸಿಎಂ ದೆಹಲಿ ಪ್ರವಾಸ: ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ | JANATA NEWS
ಬೆಂಗಳೂರು : ಇಂದಿನಿಂದ ಎರಡು ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಪ್ರವಾಸದ ವೇಳಾಪಟ್ಟಿ ಪ್ರಕಾರ, ಮಂಗಳವಾರ ಮಧ್ಯಾಹ್ನ 1.55ರ ವಿಮಾನದಲ್ಲಿ ದೆಹಲಿಗೆ ತೆರಳಿ ರಾತ್ರಿ 7ಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಲಿದ್ದಾರೆ. ಕರ್ನಾಟಕ ಭವನದಲ್ಲಿ ತಂಗುವರು. ಬುಧವಾರ ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಸಂಬಂಧ ರ್ಚಚಿಸಲಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೇಕೆದಾಟು, ಮಹಾದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮತ್ತು ಇತರ ನೀರಾವರಿ ಯೋಜನೆಗಳ ಬಗ್ಗೆ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಿ.. ಅಡೆತಡೆ, ಆಡಳಿತಾತ್ಮಕ ಮತ್ತು ತಾಂತ್ರಿಕ ಕೆಲಸಗಳ ಬಗ್ಗೆ ಮಾತುಕತೆ ನಡೆಸಿ ನಿರ್ದಿಷ್ಟ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದರು.
ನಾಳೆ ಬೆಳಗ್ಗೆ ಜಿಎಸ್ಟಿ ವಿಚಾರ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುತ್ತೇನೆ. ನಂತರ ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಯನ್ನಾಗಿ ಮಾಡಲು ಒಪ್ಪಿಗೆ ಸಿಕ್ಕಿದೆ. ಅದರ ಬಗ್ಗೆ ಕೆಲವು ವಿಚಾರಗಳನ್ನು ಮಾತನಾಡಬೇಕಿದೆ. ಹಾಗಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುತ್ತೇನೆ.
ಇಂಧನ ಸಚಿವರನ್ನು ಭೇಟಿಯಾಗುವ ಪ್ರಯತ್ನ ನಡೆಸುತ್ತಿದ್ದೇನೆ. ಇದಕ್ಕೆ ಇನ್ನೂ ಸಮಯಾವಕಾಶ ನಿಗದಿಯಾಗಿಲ್ಲ. ಅವಕಾಶ ಸಿಕ್ಕಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಗುತ್ತದೆ ಎಂದರು.
ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ದೆಹಲಿ ಬೇಟಿ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೆಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.
ಏಪ್ರಿಲ್ ಎರಡನೇ ವಾರದಲ್ಲಿ ಸಚಿವ ಸಂಪುಟ ಪುನಾಚನೆಯಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ನಿಗಮ, ಮಂಡಳಿಗಳ ನೇಮಕಾತಿಗೆ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.