ಮೈಕ್ ಬಳಸುವ ಮಸೀದಿ, ಮಂದಿರಗಳಿಗೆ ನೋಟಿಸ್, ಹೈಕೋರ್ಟ್ ಆದೇಶದಂತೆ ಕಟ್ಟುನಿಟ್ಟಿನ ಕ್ರಮ | JANATA NEWS
ಬೆಂಗಳೂರು : ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು.
ಮಂದಿರ, ಮಸೀದಿ, ಚರ್ಚ್ಗಳಿಗೆ ಈ ನೋಟಿಸ್ ನೀಡಲಾಗಿದ್ದು, ಶಬ್ಧಮಾಲಿನ್ಯ ರೂಲ್ಸ್ ಸರಿಯಾಗಿ ಪಾಲಿಸುವಂತೆ ತಾಕೀತು ಮಾಡಲಾಗಿದೆ.
ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ 6 ತಿಂಗಳ ಹಿಂದೆಯೇ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಾ ಇದ್ದಾರೆ.
ಮಸೀದಿ, ಮಂದಿರ, ಕಾರ್ಖಾನೆ, ಪಬ್ ಸೇರಿ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಧಾರ್ಮಿಕ ಮುಖಂಡರ ಜತೆ ಈ ಬಗ್ಗೆ ಸಭೆ ನಡೆಸಲಾಗಿದೆ. ಅವರಿಗೂ ಮಾರ್ಗದರ್ಶನ ನೀಡಲಾಗಿತ್ತು. ಅದರಂತೆ ಧರ್ಮಗುರುಗಳು ನಡೆದುಕೊಂಡಿದ್ದಾರೆ. ಹೈಕೋರ್ಟ್ ಆದೇಶವನ್ನು ಪಾಲನೆ ಮಾಡಲೇಬೇಕು. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಶಿಕ್ಷೆ ಆಗುತ್ತೆ. ಆದೇಶ ಉಲ್ಲಂಘಿಸಿದ ಕಡೆ ಮೈಕ್ಗಳನ್ನ ಜಪ್ತಿ ಮಾಡಿದ್ದೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.
ಸ್ಥಳೀಯ ಮಟ್ಟದಲ್ಲಿ ಡಿಸಿಪಿ ಹಾಗೂ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಹೈಕೋರ್ಟ್ ಆದೇಶ ಏನಿದೆ ಅದನ್ನು ಪಾಲಿಸಬೇಕು. ಕಾನೂನು ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಆಗುತ್ತೆ. ಇನ್ನು ಬೆಂಗಳೂರು ನಗರದಲ್ಲಿ ಮಾತ್ರ ಈಗಾಗಲೇ 40ಕ್ಕೂ ಹೆಚ್ಚು ಕೇಸ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಹಲವೆಡೆ ಮೈಕ್ಗಳನ್ನ ಜಪ್ತಿ ಮಾಡಲಾಗಿದೆ. ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.