ಹುಬ್ಬಳ್ಳಿಯಲ್ಲಿ ಪ್ರಚೋದನಾತ್ಮಕ ಪೋಸ್ಟ್ ಮಾಡಿದ ಯುವಕನಿಗೆ ಕುಮ್ಮಕ್ಕು ಕೊಟ್ಟಿದ್ದುಯಾರು? | JANATA NEWS
ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಕಳೆದ ರಾತ್ರಿ ನಡೆದಿರುವ ಗಲಾಟೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇಡೀ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯ ಮಾಡಿದ್ದಾರೆ.
ಜೆಡಿಎಸ್ ರಾಜ್ಯ ಅಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಅಧಿಕಾರ ವಹಿಸಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಒಂದಲ್ಲ ಒಂದು ಘಟನೆ ನಡೆಯುತ್ತಲೇ ಇವೆ. ಹುಬ್ಬಳ್ಳಿ ನಗರದಲ್ಲಿ 15 -20 ವರ್ಷ ಕಾಲ ನೆತ್ತರ ಹೋಕುಳಿ ಆಡುತ್ತಿದ್ದರು. 1994ರಲ್ಲಿ ದೇವೇಗೌಡರು ಅದನ್ನು ತಹಬದಿಗೆ ತಂದಿದ್ದರು. ಆದರೆ ನಿನ್ನೆ ರಾತ್ರಿ ಮತ್ತೆ ಬೆಂಕಿ ಹಚ್ಚುವ ಕೆಲಸ ಆಗಿದೆ ಎಂದರು.
ಕೆಲ ತಿಳಿಗೇಡಿಗಳು ಮುಸ್ಲಿಂ ಜನಾಂಗವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಬಲಿಯಾಗಬೇಡಿ ಎಂದು ಮುಸ್ಲಿಂ ಬಾಂದವರಿಗೆ ಹೇಳಲು ಬಯಸುತ್ತೇನೆ. ಹೀಗೆ ಬೆಂಕಿ ಹಚ್ಚೋದ್ರಿಂದ ಯಾವುದೇ ಪ್ರಯೋಜನ ಇಲ್ಲ, ಎಂದು ಮಾಜಿ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಇಂಥ ಘಟನೆಗಳು ಜಾಸ್ತಿ ಆಗುತ್ತಿವೆ. ರಾಜ್ಯ ಸರ್ಕಾರ ಏನು ಮಾಡುತ್ತಿದೆ? ಕಾಂಗ್ರೆಸ್ ನಾಯಕರು ಉರಿಯುವ ಬೆಂಕಿಗೆ ಪೆಟ್ರೋಲ್ ಹಾಕಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಂಬಿ ಮುಸ್ಲಿಂ ಜನಾಂಗ ಎಚ್ಚರ ತಪ್ಪಬಾರದು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.