ಪ್ರಧಾನಮಂತ್ರಿಗಳಿಂದ 33 ಸಾವಿರ ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ: ಸಿಎಂ ಬೊಮ್ಮಾಯಿ | JANATA NEWS
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ನಗರದ ಕೊಮ್ಮಘಟ್ಟದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಏಕಕಾಲದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11.55ಕ್ಕೆ ಯಲಹಂಕ ವಾಯು ಪಡೆ ನಿಲ್ದಾಣಕ್ಕೆ ಆಗಮಿಸಿದರು. ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಯಲಹಂಕ ವಾಯು ಪಡೆ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತ್ಮೀಯವಾಗಿ ಬರಮಾಡಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಅವರಿಗೆ ಪುಸ್ತಕವನ್ನು ನೀಡಿ ಶಾಲು ಹೊದಿಸಿ ಗೌರವಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ- ಪೆನುಕೊಂಡ ಜೋಡಿ ರೈಲು ಮಾರ್ಗ ಉದ್ಘಾಟನೆ ಹಾಗೂ ರೈಲು ಸೇವೆಗಳಿಗೆ ಚಾಲನೆ, ಬೆಂಗಳೂರು ಉಪ ನಗರ ಯೋಜನೆ ಹಾಗೂ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.
ತುಮಕೂರು, ಅರಸೀಕೆರೆ, ಯಲಹಂಕ, ರತ್ನಗಿರಿ, ಮಡಗಾಂವ್ ಮತ್ತು ಉಡುಪಿಗೆ ಹೊಸ ರೈಲು ಸೇವೆಗೆ ವಿಡಿಯೋ ಲಿಂಕ್ ಮೂಲಕ ಹಸಿರು ನಿಶಾನೆಯನ್ನು ತೋರಿದರು.
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ, ಬೆಂಗಳೂರಿನ ವರ್ತುಲ ರಸ್ತೆ-2 ಪ್ಯಾಕೇಜ್ಗಳು, ನೆಲಮಂಗಲ ತುಮಕೂರು ವಿಭಾಗದ 6-ಲೈನಿಂಗ್, NH-73 ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಭಾಗದವರೆಗೂ ರಸ್ತೆ ಅಗಲೀಕರಣ, NH-69 ರ ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ವಿಭಾಗದ ಪುನರ್ವಸತಿ ಮತ್ತು ಉನ್ನತೀಕರಣ, ಬೆಂಗಳೂರಿನಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಬೆಂಗಳೂರು ಉಪ ನಗರ ರೈಲು ಯೋಜನೆಯ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.
ಕರ್ನಾಟಕ ಅತ್ಯಂತ ಪ್ರಗತಿಪರ ರಾಜ್ಯ. ಕೃಷಿ, ಉತ್ಪಾದನಾ ತಂತ್ರಜ್ಞಾನ ವಲಯದಲ್ಲಿ ಮುಂಚೂಣಿಯಲ್ಲಿದೆ. ಅತಿ ಹೆಚ್ಚಿನ ಎಫ್ಡಿಐ ರಾಜ್ಯಕ್ಕೆ ಬಂದಿದೆ. ಅತಿ ಹೆಚ್ಚಿನ ಕೃಷಿ ಉತ್ಪನ್ನ ಕರ್ನಾಟಕದಲ್ಲಿ ಆಗುತ್ತಿದೆ. ರಾಜ್ಯ ಹೆದ್ದಾರಿಗಳು, 5 ಹೊಸ ವಿಮಾನ ನಿಲ್ದಾಣಗಳು, ಮೂರು ಬಂದರುಗಳು, ಇವೆಲ್ಲವನ್ನೂ ನಾವು ಕಾರ್ಯರೂಪಕ್ಕೆ ತರುತ್ತಿದ್ದೇವೆ.
ಮೋದಿಯವರ ಕಲ್ಪನೆಯ ನವ ಭಾರತಕ್ಕೆ ನವ ಕರ್ನಾಟಕ ಜೊತೆ ನೀಡಲಿದೆ. ನವ ಕರ್ನಾಟಕದ ನಿರ್ಮಾಣದ ಕನಸನ್ನು ನಾವು ನನಸು ಮಾಡುತ್ತೇವೆ. ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಕಟ ಮಾತೆ ಎಂಬ ಮಾತನ್ನು ಅಕ್ಷರಶ: ನಿರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.