ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್ವೈಗೆ ಸ್ಥಾನ | JANATA NEWS
ಬೆಂಗಳೂರು : ಭಾರತೀಯ ಜನತಾ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸಮಿತಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಸಂಸದೀಯ ಮಂಡಳಿಯಲ್ಲಿ 11 ಸದಸ್ಯರಿದ್ದರೆ, ಚುನಾವಾಣಾ ಸಮಿತಿಯಲ್ಲಿ 15 ಸದಸ್ಯರ ಹೆಸರುಗಳನ್ನು ಪ್ರಕಟಿಸಲಾಗಿದೆ.
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿರುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಹಿರಿಯ ನಾಯಕ, ಅಪ್ರತಿಮ ಸಂಘಟಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ. ಎಲ್. ಸಂತೋಷ್ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಪಕ್ಷವನ್ನು ಚುನಾವಣೆಗೆ ಸಿದ್ಧಪಡಿಸುವ ಮಹತ್ಕಾರ್ಯ ಯಡಿಯೂರಪ್ಪನಂಥ ಧುರೀಣರ ಹೆಗಲಿಗೇರಿರುವುದು ರಾಜ್ಯದ ಲಕ್ಷಾಂತರ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ ಎಂದಿದ್ದಾರೆ.
ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರಿಗೆ ಸ್ಥಾನ ನೀಡಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಸದೀಯ ಮಂಡಳಿಯಲ್ಲಿ ಸೇರಿಸಿರುವುದು ಮಹತ್ವದ ಕ್ರಮ ಎಂದು ಅವರು ತಿಳಿಸಿದ್ದಾರೆ.
ಸಂಸದೀಯ ಮಂಡಳಿಯ ಸದಸ್ಯರು:
ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷರು), ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿ. ಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ ಜಟಿಯಾ, ಬಿ.ಎಲ್.ಸಂತೋಷ್ (ಕಾರ್ಯದರ್ಶಿ)