ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ವಿಧಿವಶ :ಒಂದು ದಿನ ಶೋಕಾಚರಣೆ ಘೋಷಣೆ | JANATA NEWS
ಬೆಂಗಳೂರು : ಹೃದಯಾಘಾತದಿಂದ ನಿನ್ನೆ ರಾತ್ರಿ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ವಿಧಿವಶರಾಗಿದ್ದಾರೆ. ಕತ್ತಿ ನಿಧನಕ್ಕೆ ಸರ್ಕಾರ ರಾಜ್ಯಾದ್ಯಂತ ಇಂದು ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ಕತ್ತಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಮಂಗಳವಾರ ರಾತ್ರಿ ಸುಮಾರು 10.30ಕ್ಕೆ ಬಚ್ಚಲು ಕೋಣೆಯಲ್ಲಿ ಉಮೇಶ್ ಕತ್ತಿ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದ್ದು, ಬಾಗಿಲು ತೆಗೆದು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಉಮೇಶ್ ಕತ್ತಿ ಅವರನ್ನು ಕೂಡಲೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಉಮೇಶ್ ಕತ್ತಿ ಅವರಿಗೆ ಈ ಹಿಂದೆ ಎರಡು ಬಾರಿ ಹೃದಯಾಘಾತ ಆಗಿದ್ದು, ಉಮೇಶ್ ಕತ್ತಿ ಅವರಿಗೆ ಹೃದಯಕ್ಕೆ ಸ್ಟಂಟ್ ಅಳವಡಿಸಲಾಗಿತ್ತು, ಎನ್ನಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದುಃಖ ವ್ಯಕ್ತಪಡಿಸಿದ್ದು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಎಂದಿದ್ದಾರೆ. ಅವರು ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ತಿಳಿಸಿದ್ದಾರೆ.