ಬಿಎಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ: ಭ್ರಷ್ಟಾಚಾರದ ಆರೋಪದಡಿ ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ | JANATA NEWS
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಕಳೆದ ವಾರ ಈ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್ಕುಮಾರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 2ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಕೋರ್ಟ್ ಸೂಚಿಸಿದೆ.
ಪ್ರಕರಣದದಲ್ಲಿ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಭಾರತೀಯ ದಂಡ ಸಂಹಿತೆಯಯ ವಿವಿಧ ಸೆಕ್ಷನಗಳ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ನ್ಯಾಯಾಧೀಶರು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದ್ದಾರೆ.
ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪ ಮಾಡಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದಾಖಲಿಸಿದ್ದರು