ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಸರ್ಕಾರಿ ಪ್ರಾಯೋಜಿತ ಕೊಲೆ | JANATA NEWS
ಬೆಂಗಳೂರು : ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಥಗಿತದಿಂದ ಐಸಿಯುನಲ್ಲಿದ್ದ ರೋಗಿಗಳ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಸದನದಲ್ಲಿ ವಾಕ್ಸಮರಕ್ಕೆ ಕಾರಣವಾಯಿತು.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ರೋಗಿಗಳ ಸಾವಿನ ಪ್ರಕರಣ ಕುರಿತಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಜನರೇಟರ್ ಕೆಟ್ಟು, ಕರೆಂಟಿಲ್ಲದೇ ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಜವಾಬ್ದಾರಿ? ಆ ಆಸ್ಪತ್ರೆಯವರ ಬಳಿ ಹಣ ಇದೆ, ಜನರೇಟರ್ ವ್ಯವಸ್ಥೆ ಮಾಡಬಹುದಿತ್ತು. ಇದಕ್ಕೆ ಆಸ್ಪತ್ರೆಯವರು ಹೊಣೆಗಾರರಾ? ಸರ್ಕಾರ ಹೊಣೆನಾ? ಈ ಸಾವಿಗೆ ಸರ್ಕಾರವೇ ಹೊಣೆ ಹೊರಬೇಕು. ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದರ ಜವಾಬ್ದಾರಿ ಆರೋಗ್ಯ ಇಲಾಖೆ ಹೊರಬೇಕು. ಮೃತರ ಕುಟುಂಬಗಳಿಗೆ ಕನಿಷ್ಟ 25 ಲಕ್ಷ ಪರಿಹಾರ ಕೊಡಿ. ಇದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಕಿಡಿಕಾರಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ,ಇದು ಆಕಸ್ಮಿಕ ಸಾವಲ್ಲ, ಸರ್ಕಾರಿ ಪ್ರಾಯೋಜಿಕ ಕೊಲೆ ಎಂದರೆ ಹೇಗೆ? ಆಕಸ್ಮಿಕ ಸಾವಿಗೆ ಸರ್ಕಾರಿ ಪ್ರಾಯೋಜಿತ ಕೊಲೆ ಎಂದರೆ ಹೇಗೆ ಎಂದು ಪ್ರಶ್ನಿಸಿದರು.
ಮಾಧುಸ್ವಾಮಿ ಮಾತಿಗೆ ಕಾಂಗ್ರೆಸ್ ಶಾಸಕರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾಧುಸ್ವಾಮಿಗೆ ಸಚಿವ ಆರ್. ಅಶೋಕ್, ಶ್ರೀರಾಮುಲು ಸಾಥ್ ನೀಡಿದರು. ಈ ವೇಳೆ ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು.
ಶ್ರೀರಾಮುಲು ಸರ್ಕಾರದ ಪರವಾಗಿ ಉತ್ತರ ನೀಡಿ, ವಿಮ್ಸ್ ಆಸ್ಪತ್ರೆಯಲ್ಲಿ 11 ರಂದು ಮುಲ್ಲಾ ಹುಸೇನ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ಕಿಡ್ನಿ ವೈಫಲ್ಯ ಹಾಗೂ ಮೂತ್ರಪಿಂಡ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಅವರು ಮೃತಪಟ್ಟಿದ್ದಾರೆ. ಆದರೆ ಸರ್ಕಾರವೇ ಈ ಸಾವಿಗೆ ಹೊಣೆ ಎಂಬ ಮಾತನ್ನು ಒಪ್ಪಲು ಸಾಧ್ಯವಿಲ್ಲ ಎಂದರು