ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ | JANATA NEWS
ಬೆಂಗಳೂರು : ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು 7-8 ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು.
ಮಹಿಳಾ ಆಯೋಗಕ್ಕೆ ಇನ್ನಷ್ಟು ಅಧಿಕಾರದ ಜೊತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸಿದ್ಧವಿದೆ ಎಂದರು.
ಇದಲ್ಲದೇ ಕಲ್ಯಾಣ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು ಕ್ರಮ ವಹಿಸಿದೆ.
ಕೆಲಸ ಮಾಡುವ ಗರ್ಭಿಣಿಯರಿಗೆ ವಿಶೇಷ ಸ್ಥಳ ನಿಗದಿ, 5 ಪ್ರಮುಖ ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳೆಯರಿಗೆ ಹಾಸ್ಟೆಲ್, ಐಐಎಂ ತರಬೇತಿ, ಎಲಿವೆಟ್ ಯೋಜನೆಯಡಿ ಸ್ಟಾರ್ಟ್ ಅಪ್ ಗೆ ಅವಕಾಶ, ಸ್ತ್ರೀ ಶಕ್ತಿ ಸಂಘಗಳಿಗೆ ಸ್ರ್ತೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ.
ಮಹಿಳೆಯರಿಗೆ ವಿಶೇಷ ಕ್ಲಾಸ್ ರೂಮ್ ನಿರ್ಮಾಣ, ಆಶಾ ಕಾರ್ಯಕರ್ತೆಯರು ಹಾಗೂ ಅಡುಗೆ ಮಾಡುವವರ ಗೌರವಧನ ಹೆಚ್ಚಳ ಮಾಡಿದ್ದೇವೆ.
ಎನ್.ಪಿ.ಎಸ್ ಯೋಜನೆ ಮರುಪ್ರಾರಂಭವಾಗಿದೆ. ಈ ವರ್ಷ 4000 ಹೊಸ ಅಂಗನವಾಡಿ ನಿರ್ಮಾಣವಾಗುತ್ತಿದೆ. ಮಹಿಳೆಯರಿಗೆ ಎಲ್ಲ ಹಂತದ ನೆರವು ಒದಗಿಸಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದರು.
ನಿರ್ಭಯ ಅಡಿ ಬೆಂಗಳೂರಿನ ಲ್ಲಿ 7500 ಕೃತಕ ಬುದ್ಧಿಮತ್ತೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ರಾತ್ರಿ ವೇಳೆ ಕೆಲಸ ಮುಗಿಸಿ ಬರುವ ಮಹಿಳೆಯಾರಿಗೆ ಇದು ಸುರಕ್ಷತೆ ಒದಗಿಸುತ್ತದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿಯನ್ನು ಶಾಲಾ ಕಾಲೇಜುಗಳ ಹಾಸ್ಟೆಲ್ ಗಳಲ್ಲಿ ನೀಡಲಾಗುತ್ತಿದೆ ಎಂದರು.