ಮದುವೆ ನಿಶ್ಚಿಯವಾಗಿದ್ದ ಯುವಕನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು | JANATA NEWS
ಹಾಸನ : ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯಲ್ಲಿ ನಡೆದಿದೆ.
ಕೂಡ್ಲೂರು ಗ್ರಾಮದ ದಿನೇಶ್ ಜೊತೆ ಎರಡು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಗೆ(16 ವರ್ಷ) ಮದುವೆ ನಿಶ್ಚಯ ಮಾಡಿದ್ದರು.
ಸೋಮವಾರ ಮಧ್ಯಾಹ್ನ 2.30ಕ್ಕೆ ರಾಮನಾಥಪುರ ಜಾತ್ರೆಗೆ ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿ ಬಾಲಕಿಯನ್ನು ಕರೆದೊಯ್ದಿದ್ದ. 4 ಗಂಟೆ ವೇಳೆಗೆ ಆಕೆಯ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ವಿಷ ಕುಡಿದಿದ್ದಾಳೆ ಎಂದು ತಿಳಿಸಿದ್ದಾನೆ.
ಬಳಿಕ ದಿನೇಶ್ ಕುಟುಂಬದವರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾನೆ. ಆದರೆ ಆಕೆ ಆಸ್ಪತ್ರೆಗೆ ದಾಖಲಾಗುವ ವೇಳೆಗೆ ಮೃತಪಟ್ಟಿದ್ದಾಳೆ. ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಮತ್ತೊಂದೆಡೆ ದಿನೇಶ್ ಕೂಡ ವಿಷಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ದಿನೇಶ್ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಾಲಕಿ ಮೃತದೇಹದ ಮೇಲೆ ಗಾಯದ ಗುರುತು, ಕುತ್ತಿಗೆಯಲ್ಲಿ ಪೆಟ್ಟಾಗಿರುವ ಗಾಯದ ಗುರುತು ಪತ್ತೆಯಾಗಿದೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಿಸಲಾಗಿದೆ.