ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿ ಶ್ರೀಗಳು ಲಿಂಗೈಕ್ಯ | JANATA NEWS
ವಿಜಯಪುರ : ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿ ಶ್ರೀಗಳು ನಿನ್ನೆ ಲಿಂಗೈಕ್ಯರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು ಮತ್ತು ಕೆಲವು ಸಮಯಗಳಿಂದ ಅಸ್ವಸ್ಥರಾಗಿದ್ದರು.
ಪಾಂಡಿತ್ಯಪೂರ್ಣ ಪ್ರವಚನಗಳಿಗೆ ಹೆಸರುವಾಸಿಯಾಗಿದ್ದ ಮತ್ತು ದೊಡ್ಡ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಹೊಂದಿದ್ದ ಶ್ರೀಗಳ ಕುರಿತು ಸೋಮವಾರ ರಾತ್ರಿ ವೇಳೆ ಸುದ್ದಿಗೋಷ್ಠಿ ನಡೆಸಿದ ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಶ್ರೀಗಳ ಅಂತಿಮ ವಿಧಿ ವಿಧಾನಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ವಿಜಯಪುರದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ತಿಳಿಸಿದ್ದಾರೆ. ಮಂಗಳವಾರ ಸಂಜೆ ಅಂತಿಮ ವಿಧಿವಿಧಾನ ನಡೆಯಲಿದ್ದು, ಈ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದೇವೆ, ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಶ್ರೀಗಳ ಅಂತಿಮ ದರ್ಶನ ಮಾಡಲಿದ್ದು, ಬಳಿಕ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ಬೆಳಿಗ್ಗೆಯ ವರೆಗೂ ಆಶ್ರಮದ ಆವರಣದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಆ ಬಳಿಕ ಬೆಳಗ್ಗೆ 6 ರಿಂದ ಸಂಜೆ 3 ಗಂಟೆವರೆಗೂ ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತಿದೆ.
ಮಧ್ಯಾಹ್ನ 3 ಗಂಟೆಯಿಂದ 4 ಗಂಟೆವರೆಗೂ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಸಂಜೆ 5 ಗಂಟೆಗೆ ಅಂತಿಮ ಕಾರ್ಯಗಳು ಆಶ್ರಮದಲ್ಲೇ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.