ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತಿ ಕೋರಿ ಸಿಎಂಗೆ ಸಚಿವ ಆರ್.ಅಶೋಕ್ ಪತ್ರ | JANATA NEWS
ಬೆಂಗಳೂರು : ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ವಿಮುಕ್ತಿ ನೀಡುವಂತೆ ಸಿಎಂ ಬೊಮ್ಮಾಯಿಗೆ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಸದ್ಯ ನಿರ್ವಹಿಸುತ್ತಿರುವ ಜವಾಬ್ದಾರಿಗಳ ಕಾರಣದಿಂದಾಗಿ ಮಂಡ್ಯ ಜಿಲ್ಲೆಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಂದಾಯ ಸಚಿವ ಆರ್.ಅಶೋಕ್ ಪತ್ರ ಬರೆದಿದ್ದಾರೆ.
26ನೇ ಜನವರಿ 2023ರ ಗಣರಾಜ್ಯೋತ್ಸವ ದಿನಾಚರಣೆ ದಿನದಂದು ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ನನ್ನನ್ನು ನೇಮಿಸಿದ್ದ ಸಂದರ್ಭದಲ್ಲಿ ಆರ್ ಅಶೋಕ್ರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು. ಕಂದಾಯ ಇಲಾಖೆ ಪ್ರಾರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಕಂದಾಯ ಸಚಿವರು ಆ ಗ್ರಾಮಗಳಲ್ಲಿ ವಾಸ್ತವ್ಯ ಹೂಡಬೇಕಿದೆ.ಇನ್ನೂ ಕನಿಷ್ಠ 2-3 ಜಿಲ್ಲೆಗಳಲ್ಲಿ ಅವರು ಗ್ರಾಮ ವಾಸ್ತವ್ಯ ಮಾಡಬೇಕಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಕಲಬುರಗಿ ಜಿಲ್ಲೆಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಲಂಬಾಣಿ ತಾಂಡಾ, ಹಟ್ಟಿ, ಇತ್ಯಾದಿ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಸುಮಾರು 53,000ಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಸನ್ಮಾನ್ಯ ಪ್ರಧಾನಮಂತ್ರಿಗಳು ವಿತರಿಸಿದ್ದು, ಇದೇ ಮಾದರಿಯಲ್ಲಿ ಮುಂದಿನ 30 ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ಬಡವರು ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಿ 94ಸಿ ಮತ್ತು 94ಸಿಸಿ ಅಡಿಯಲ್ಲಿ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿದ ಸುಮಾರು 10,000 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ವಿಧಾನಸೌಧದ ಹೊರ ಆವರಣದ ಪೂರ್ವದಿಕ್ಕಿನ ಜಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಹಾಗೂ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ಸ್ಥಾಪಿಸಲು ರಚಿಸಿರುವ ಉಸ್ತುವಾರಿ ಸಮಿತಿಗೆ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, 30 ದಿನಗಳಲ್ಲಿ ಕೆಲಸ ಪೂರ್ಣಗೊಳಿಸಿ ಪುತ್ಥಳಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಬೇಕಾಗಿದೆ.
14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿಗೂ ಆರ್ ಅಶೋಕ್ರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದು ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅವರು ಯಶಸ್ವಿಯಾಗಿ ನಡೆಸಬೇಕಾಗಿದೆ.
ಇವೆಲ್ಲವೂ ಸರ್ಕಾರದ ಪ್ರಮುಖ ಜನಪ್ರಿಯ ಕಾರ್ಯಕ್ರಮಗಳಾಗಿರುವ ಕಾರಣ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ನಿರ್ವಹಿಸಲು ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎಂದಿರುವ ಸಚಿವರು ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಜವಾಬ್ದಾರಿಯಿಂದ ಅವರನ್ನು ವಿಮುಕ್ತಿಗೊಳಿಸಬೇಕೆಂದು ಕೋರಿದ್ದಾರೆ.