ಭೀಕರ ರಸ್ತೆ ಅಪಘಾತ, ನವದಂಪತಿ ದುರ್ಮರಣ! | JANATA NEWS
ತುಮಕೂರು : ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆಯೊಂದು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗೇಟ್ ಬಳಿ ನಡೆದಿದೆ.
ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ.
ರಘು, ಅನುಷಾ ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ದಂಪತಿ, ಇಂದು ಸಂಬಂಧಿಕರೊಬ್ಬರ ಮದುವೆಗೆ ಕಾರಿನಲ್ಲಿ ತೆರಳುತ್ತಿದ್ದರು. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.