ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅಶ್ವಥ್ ನಾರಾಯಣ | JANATA NEWS
ಬೆಂಗಳೂರು : ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಗುರಿಯಾಗಿದೆ.
ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ನಾನು ಆ ಮಾತುಗಳನ್ನು ವ್ಯಕ್ತಿಗತವಾಗಿ ಹೇಳಿರುವಂತದ್ದಲ್ಲ. ರಾಜಕೀಯವಾಗಿ ಹಾಗೂ ಸೈದ್ಧಾಂತಿಕವಾಗಿ ಹೇಳಿರುವ ಮಾತುಗಳು ಅವು. ನನಗೆ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ವೈಯ್ಯಕ್ತಿಕ ದ್ವೇಷವಿಲ್ಲ. ನಾನು ಹೇಳಿರುವ ಮಾತುಗಳನ್ನು ತಿರುಚಿ ಬಿತ್ತರಿಸುವುದು ಸಿದ್ದರಾಮಯ್ಯ ಅವರಿಗೆ ನಿಮಿಷದ ಕೆಲಸ. ನಾನು ಹೇಳಿದ ಮಾತುಗಳಿಂದ ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಸಚಿವ ಡಾ ಅಶ್ವತ್ಥನಾರಾಯಣ್ ಅವರು ಮರು ಹೇಳಿಕೆ ನೀಡಿದ್ದಾರೆ.
ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂಬರ್ಥದಲ್ಲಿ ಹೇಳಿದ ಮಾತಿಗೆ 'ಕೋವಿ ಹಿಡಿದು ಬನ್ನಿ' ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ನಮಗೆ ಮತಯಂತ್ರವೇ ಕೋವಿ, ಮತದಾರರು ಕಾಂಗ್ರೆಸ್ ವಿರುದ್ದ ಒತ್ತುವ ಒಂದೊಂದು ಮತಗಳೂ ಒಂದೊಂದು ಬುಲೆಟ್ಗಳೇ. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅಂತಿಮ ಮೊಳೆ ಹೊಡೆಯಲು ಜನತೆಯೇ ತೀರ್ಮಾನಿಸಿದ್ದಾರೆ.
ಟಿಪ್ಪುವನ್ನು ಯಾವ ರೀತಿ ವಿಜೃಂಭಣೆ ಮಾಡುತ್ತಿದ್ದಾರೆ, ಅವರ ಜಯಂತಿಯನ್ನು ಯಾವ ರೀತಿ ಕಾಂಗ್ರೆಸ್ ಪಕ್ಷದವರು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಅದನ್ನು ಖಂಡಿಸುವಂತಹದ್ದು ಆಗಬೇಕು. ಅದರ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವಂತಹದ್ದಾಗಬೇಕು. ಬರುವಂತಹ ಚುನಾವಣೆಯಲ್ಲಿ ಜನರ ಬೆಂಬಲವನ್ನು ನಮ್ಮ ಪರವಾಗಿ ಪಡೆದುಕೊಳ್ಳಬೇಕು. ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇನೆ. ನಾವಿವತ್ತು ಪ್ರಜಾಪ್ರಭುತ್ವದಲ್ಲಿದ್ದೇವೆ.
ಯಾವುದೋ ಯುದ್ಧದ ಕಾಲದಲ್ಲಿ ಇಲ್ಲ ನಾವು.ಆ ಕಾಲದಲ್ಲಿ ಯುದ್ಧದಲ್ಲಿ ಗೆದ್ದು ಆಡಳಿತ ಮಾಡಬೇಕಿತ್ತು. ಇವತ್ತು ಚುನಾವಣೆಯಲ್ಲಿ ಗೆದ್ದರೆ ಮಾತ್ರ ನಾವು ಆಡಳಿತ ಮಾಡೋದಕ್ಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಾನು ಮಾತನಾಡಿರುವಂತಹದ್ದು, ಒಂದು ಆಡುಭಾಷೆಯಲ್ಲಿ ಮಾತನಾಡಿದ್ದೇನೆ ಹೊರತು, ವ್ಯಕ್ತಿಗತವಾಗಿ ಮಾತನಾಡಿಲ್ಲ.
ಇಡೀ ಕಾಂಗ್ರೆಸ್ ಪಕ್ಷವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಿರುವಂತಹದ್ದು. ಇವರು ಅದನ್ನು ತಿರುಚುವಂತಹ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಸಂಪೂರ್ಣವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು @siddaramaiah ಅವರ ಸಂಸ್ಕೃತಿ ಆಗಿರಬಹುದು.
— Dr. Ashwathnarayan C. N. (@drashwathcn) February 16, 2023
ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ.
3/3