ಕರ್ನಾಟಕದ ವಿದ್ಯಾರ್ಥಿಗಳಿಗೆ ಐಐಟಿ ಮಾದರಿಯಲ್ಲಿ ಶಿಕ್ಷಣ ದೊರಕಿಸಲು ಕೆಐಟಿ ಸ್ಥಾಪನೆ: ಹೊಸ 9 ವಿವಿ ಉದ್ಘಾಟಿಸಿದ ಸಿಎಂ | JANATA NEWS
ಬೆಂಗಳೂರು : ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕೆಂಬ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಹಾಸನ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ಬೀದರ್ ವಿವಿ ಹಾಗೂ ಮಂಡ್ಯ ಮತ್ತು ರಾಯಚೂರು ಸಂಯೋಜಿತ ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಇಲ್ಲಿ ವರ್ಚುಯಲ್ ಆಗಿ ಉದ್ಘಾಟಿಸಿದರು.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ 09 ನೂತನ ವಿಶ್ವವಿದ್ಯಾಲಯಗಳನ್ನು 07 ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣವನ್ನು ವರ್ಚುವಲ್ ಮೂಲಕ ಮುಖ್ಯಮಂತ್ರಿಗಳು ಉದ್ಘಾಟಿಸಿ ಮಾತನಾಡಿದರು.
ಇದರ ಜತೆಯಲ್ಲೇ 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು 75 ಕೋಟಿ ರೂಪಾಯಿ ವೆಚ್ಚದಲ್ಲಿ 'ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ' (ಕೆಐಟಿ) ಆಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷಿ ಯೋಜನೆಗೂ ಚಾಲನೆ ನೀಡಲಾಯಿತು. ಅಲ್ಲದೆ, ಧಾರವಾಡದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿಯ ಕಟ್ಟಡವನ್ನು ಕೂಡ ಲೋಕಾರ್ಪಣೆ ಮಾಡಲಾಯಿತು.
ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಮಾದರಿಯಲ್ಲಿಯೇ ಉನ್ನತೀಕರಣಗೊಂಡ ಕಾಲೇಜುಗಳನ್ನು ಕರ್ನಾಟಕ ತಂತ್ರಜ್ಞಾನ ಸಂಸ್ಥೆ (KIT)ಗಳಾಗಿ ಸ್ಥಾಪಿಸಲಿದ್ದೇವೆ.
ಈ ಸಂಬಂಧ ಕರ್ನಾಟಕ ಸರ್ಕಾರ ದೇಶ ವಿದೇಶಗಳ ವಿಶ್ವವಿದ್ಯಾಲಯಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಇದರಿಂದ ನಮ್ಮಲ್ಲಿಯೇ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗಲಿದೆ ಎಂದು ಅವರು ವಿವರಿಸಿದರು. ಈ ಹೊಸ ವಿಶ್ವವಿದ್ಯಾಲಯಗಳು ಹಾವೇರಿ, ಮಂಡ್ಯ, ಚಾಮರಾಜನಗರ, ಬೀದರ್, ಬಾಗಲಕೋಟೆ, ಕೊಡಗು, ಕೋಲಾರ ಮತ್ತಿತರ ಕಡೆಗಳಲ್ಲಿ ಸ್ಥಾಪನೆಯಾಗಲಿವೆ.
ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಇಂದು ಸರ್ಕಾರ ಆರಂಭಿಸಿರವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯವನ್ನು ಬರೆಯುವ ಕೇಂದ್ರಗಳಾಗಿವೆ. ಶಿಕ್ಷಣ ಬೆಳವಣಿಗೆ ಹೊಂದಬೇಕು. ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಾತನಾಡಿ, ಉನ್ನತ ಶಿಕ್ಷಣ ದಲ್ಲಿ ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಒತ್ತು ಕೊಡಲಾಗಿದೆ ಎಂದರು.
ರಾಜ್ಯದಲ್ಲಿ ಅಳವಡಿಸಿ ಕೊಂಡಿರುವ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶದಂತಹ ಪರಿಣಾಮಕಾರಿ ವ್ಯವಸ್ಥೆಯು ಇಡೀ ಪ್ರಪಂಚದಲ್ಲೇ ಎಲ್ಲೂ ಇಲ್ಲ. ಇದರಿಂದ ನಮ್ಮಲ್ಲಿ ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಎರಡೂ ಬಂದಿದೆ ಎಂದರು.
ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್.ಅಶ್ವಥ್ ನಾರಾಯಣ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು.