ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು! | JANATA NEWS
ಬೆಂಗಳೂರು : ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆಯುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಬಿಡದಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸಂಚು 1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ, ಸಂಚು 2: ಮೊಸರಿನ ಮೇಲೆ ಹಿಂದಿಯ 'ದಹಿ' ಪದ ಮುದ್ರಣ; ಕನ್ನಡಿಗರ ತೀವ್ರ ವಿರೋಧದಿಂದ ಎರಡನೇ ಸಂಚು ವಿಫಲ. 3ನೇ ಸಂಚನ್ನು ಸಫಲಗೊಳಿಸಲು ಕೇಂದ್ರ ಸರ್ಕಾರ ಅಮುಲ್ ಅನ್ನು ಮುಂದಿಟ್ಟುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ.
ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ.ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ನಲ್ಲಿಯೇ ಕರ್ನಾಟಕದಲ್ಲಿ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಕನ್ನಡಿಗರು ಪ್ರಬಲ ಪ್ರತಿರೋಧ ಒಡ್ಡುತ್ತಿರುವುದರಿಂದ ಕೆಎಂಎಫ್ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ ಎಂದಿದ್ದಾರೆ.
ಅಮುಲ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶೋಭಾ ಕರಂದ್ಲಾಜೆ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಕೆಎಂಎಫ್ ಮೇಲಾಗುವ ದಾಳಿ ಅರಿವಾಗುತ್ತಿಲ್ಲ. ಅವರಿಬ್ಬರೂ ಅದರ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು. ರಾಜ್ಯ ನಾಯಕರು ಗುಜರಾತ್ ನಾಯಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 8, 2023
ಸಂಚು1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ @AmitShah ಹೇಳಿಕೆ
ಸಂಚು2: ಮೊಸರಿನ ಮೇಲೆ ಹಿಂದಿಯ 'ದಹಿ' ಪದ ಮುದ್ರಣ
ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ. 1/10#ನಂದಿನಿಉಳಿಸಿ