ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಬಿಜೆಪಿಗೆ ಸೇರ್ಪಡೆ! | JANATA NEWS
ಬೆಂಗಳೂರು : ಕಾಂಗ್ರೆಸ್ ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ಮಗಳು ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಸಾಗರ ಕ್ಷೇತ್ರದ ಕೈ ಟಿಕೆಟ್ ತಪ್ಪಿದ ಹಿನ್ನೆಲೆ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್ಗಾಗಿ ಬಾರೀ ಲಾಬಿ ನಡೆಸಿದ್ದರು. ಆದರೆ ಕಾಗೋಡು ತಿಮ್ಮಪ್ಪ ಅವರ ಸೋದರ ಅಳಿಯ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಈ ಬಾರಿಯ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಧಾನಗೊಂಡು ಅವರು ಬಿಜೆಪಿ ಕಡೆ ಮುಖ ಮಾಡಿದ್ದಾರೆ.
ಇಂದು ಕಾಗೋಡು ಪುತ್ರಿ ರಾಜನಂದಿನಿಯನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮ ನಡೆದಿದ್ದು ಮಾಜಿ ಸಿಎಂ ಯಡಿಯೂರಪ್ಪ , ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.
ಬಿಜೆಪಿ ಕಚೇರಿಯಲ್ಲಿ ಗೋಡ್ ತಿಮ್ಮಪ್ಪ ಪುತ್ರಿ ರಾಜ ನಂದಿನಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು ಅವರನ್ನು ಪಕ್ಷದ ಬಾವುಟ ನೀಡಿ ಪಕ್ಷ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ಈ ಬಗ್ಗೆ ಯಡಿಯೂರಪ್ಪ ಮಾತನಾಡಿ, ನಾಡು ಕಂಡ ಅಪರೂಪದ ರಾಜಕಾರಣಿ, ಕಾಗೋಡು ತಿಮ್ಮಪ್ಪ ಪುತ್ರಿ ಕಾಂಗ್ರೆಸ್ ಸ್ಥಾನಮಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ಪಕ್ಷಕ್ಕೆ ಶಕ್ತಿ ತಂದಿದೆ. ಹಿಂದುಳಿದ ವರ್ಗಕ್ಕೆ ಸೇರಿದ ರಾಜನಂದಿನಿ ವೃತ್ತಿಯಲ್ಲಿ ವೈದ್ಯರು. ಇವರ ಸೇರ್ಪಡೆಯಿಂದ ನಮ್ಮ ಅಭ್ಯರ್ಥಿಗಳು ಗೆಲುವಿಗೆ ಸಹಕಾರಿಯಾಗಲಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದಿದ್ದಾರೆ.