ಕಾರವಾರ: ಬಿಜೆಪಿ ಕರೆ ಕೊಟ್ಟ ಸ್ವಯಂಪ್ರೇರಿತ ಬಂದ್ ಭಾಗಶಃ ಯಶಸ್ವಿ | Janata news
ಕಾರವಾರ : ರೈತರ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಕರೆಕೊಟ್ಟ ಬಂದ್ಗೆ ಕಾರವಾರದಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾವು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲೇ ಕೃಷಿ ಸಾಲ ಮನ್ನಾ ಮಾಡುತ್ತೇನೆಂದು ಚುನಾವಣೆಯ ಮುನ್ನ ಭರವಸೆ ನೀಡಿದ್ದ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಘೋಷಣೆಯಂತೆ ರೈತರ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ, ರಾಜ್ಯ ಬಿಜೆಪಿ ಘಟಕವು ರಾಜ್ಯಾದ್ಯಂತ ಸ್ವಯಂಪ್ರೇರಿತ ಬಂದ್ಗೆ ಕರೆಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾರವಾರದಲ್ಲೂ ಸಹ ಬಹುತೇಕ ಅಂಗಡಿ ಮುಂಗಟ್ಟುಗಳು ಹಾಗೂ ಹೊಟೇಲ್ಗಳು ಬಂದ್ ಆಗಿದ್ದವು. ಬಸ್ ಹಾಗೂ ರಿಕ್ಷಾ ಸಂಚಾರವು ಎಂದಿನಂತೆ ಇತ್ತು. ಶಾಲಾ ಹಾಗೂ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದವು. ಜನಸಂಚಾರ ಕೂಡ ಎಂದಿನಂತೆ ಸಾಮಾನ್ಯವಾಗಿತ್ತು.
ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ಮಿತ್ರಸಮಾಜದಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ, ಕುಮಾರಸ್ವಾಮಿಯವರು ರಾಜ್ಯದ ರೈತರಿಗೆ ಸಾಲಮನ್ನಾದ ಭರವಸೆ ನೀಡಿ ನಂತರ ಯೂಟರ್ನ್ ತೆಗೆದುಕೊಂಡಿದ್ದಾರೆ. ಅವರು ಕೊಟ್ಟಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಈ ಮೂಲಕ ಮುಖ್ಯಮಂತ್ರಿಗಳು ರಾಜ್ಯದ ರೈತವರ್ಗಕ್ಕೆ ಮೋಸ ಮಾಡಿದ್ದಾರೆಂದು ಟೀಕಿಸಿದರು. ಕುಮಾರಸ್ವಾಮಿಯವರು ತಾವು ಕೊಟ್ಟ ಮಾತಿನಂತೆ ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಇಲ್ಲವಾದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಶಾಸಕಿ ರೂಪಾಲಿ ನಾಯ್ಕ ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಣಪತಿ ಉಳ್ವೇಕರ್ ಇನ್ನಿತರರು ಇದ್ದರು.
ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.