ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ! | JANATA NEWS
ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಗುರುವಾರ ಬೊಮ್ಮಾಯಿ ಅವರು ಬರೆದ ಪತ್ರದಲ್ಲಿ, ಆರಂಭದಲ್ಲಿ ತಾವು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದಕ್ಕೆ ಸಿದ್ದರಾಮ್ಯನವರಿಗೆ ಅಭಿನಂದನೆ ತಿಳಿಸಿದ್ದಾರೆ. ಕಳೆದ ಎರಡು ವಾರದಿಂದ ತಾವು ಕಾಂಗ್ರೆಸ್ ನೀಡಿರುವ ಐದು ಗ್ಯಾರೆಂಟಿಗಳ ಅನುಷ್ಠಾನಕ್ಕಾಗಿ ಹಲವಾರು ಸಭೆಗಳನ್ನು ನಡೆಸಿದ್ದೀರಿ. ಅದರಲ್ಲಿಯೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದು ತಿಳಿದಿದೆ.
ಸರ್ಕಾರವೇ ತಿಳಿಸಿರುವಂತೆ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸುಮಾರು 50,000 ಕೋಟಿ ರೂಪಾಯಿ ಬೇಕೆಂದು ರಾಜ್ಯದ ಜನತೆಗೆ ತಿಳಿಸಿದ್ದೀರಿ.ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಕೆಲವು ಎಚ್ಚರಿಕೆ ವಹಿಸುವುದು, ರಾಜ್ಯದ ಪ್ರಮುಖ ಕ್ಷೇತ್ರಗಳಾದ ಹಣಕಾಸು, ಶಿಕ್ಷಣ, ಆರೋಗ್ಯ, ಮಹಿಳಾ ಅಭಿವೃದ್ಧಿ, ಮೂಲ ಸೌಕರ್ಯ, ರೈತರ ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳ ಹಿತ ಕಾಪಾಡುವುದು ಅವಶ್ಯಕತೆ ಇದೆ ಎನ್ನುವ ಮಾತು ಜನರಲ್ಲಿ ಕೇಳಿ ಬರುತ್ತಿದೆ ಎಂದಿದ್ದಾರೆ.
ಯೋಜನೆಗಳಿಗೆ ಅನುದಾನ ಕಡಿತಗೊಳಿಸಬೇಡಿ: ರೈತರಿಗೆ ನೀಡಲಾಗುವ ಬಡ್ಡಿ ರಹಿತ ಅಲಾವಧಿ ಸಾಲದ ಮಿತಿ ಮೂರು ಲಕ್ಷದಿಂದ ಐದು ಲಕ್ಷಕ್ಕೆ ಏರಿಸಿರುವುದರಲ್ಲಿ ಯಾವುದೇ ಹಣಕಾಸಿನ ಕಡಿತ ಮಾಡುವುದು ಸೂಕ್ತವಲ್ಲ. ರೈತರ ಕನಿಷ್ಠ ಬೆಂಬಲಬೆಲೆ ಯೋಜನೆ ಅಡಿಯಲ್ಲಿ ಆವರ್ತ ನಿಧಿ 3,500 ಕೋಟಿಗೆ ಹೆಚ್ಚಿಸಲು 2023-24ರ ಆಯವ್ಯಯದಲ್ಲಿ 1,500 ಕೋಟಿ ಒದಗಿಸಲಾಗಿದ್ದು, ಇದು ಅತ್ಯಂತ ಅಗತ್ಯವಾಗಿದೆ. ಇದನ್ನು ಕಡಿತಗೊಳಿಸಬಾರದು.
ವಿವೇಕ ಯೋಜನೆ ಅಡಿಯಲ್ಲಿ 7,601 ಶಾಲಾ ಕೊಠಡಿಗಳು ಹಾಗೂ ಇತರ ಯೋಜನೆ ಸೇರಿ ಒಟ್ಟು 9,856 ಶಾಲಾ ಕೊಠಡಿಗಳ ನಿರ್ಮಾಣವನ್ನು ಪ್ರಸ್ತುತ ವರ್ಷ ಪೂರ್ಣಗೊಳಿಸುವ ಉದ್ದೇಶವಿದೆ. ಇದರಲ್ಲಿ ಅನುದಾನದ ಕಡಿತ ಮಾಡಬಾರದು.
ರೈತರು, ಕಾರ್ಮಿಕರು, ಮೀನುಗಾರರು, ನೇಕಾರರು ಇತರರಿಗೆ ರೈತ ವಿದ್ಯಾನಿಧಿ ಕಾರ್ಯಕ್ರಮ ಮುಂದುವರೆಸುವುದು ಅತ್ಯಂತ ಅವಶ್ಯವಿದೆ. ಇದಕ್ಕೆ ಸೂಕ್ತ ಅನುದಾನ ಆಯವ್ಯಯದಲ್ಲಿ ಒದಗಿಸಿದ್ದು, ಇದನ್ನು ಮುಂದುವರೆಸಬೇಕು ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ.
ಉಚಿತ ಡಯಾಲಿಸಿಸ್ ಸೇವೆ ಒಂದು ಲಕ್ಷ ಸೈಕಲ್ಗೆ ವಿಸ್ತರಣೆ ಮಾಡಿದ್ದು, ಹಾಗೂ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕಿಮೊ ಥೆರಪಿ ಸೈಕಲ್ಗಳನ್ನು ಹೆಚ್ಚಿಸುವಂತಹದ್ದು, ಮತ್ತು ಪಿಹೆಚ್ಸಿಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ ಮಾಡುವ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು.
ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಪೌಷ್ಟಿಕ ಕಾರ್ಯಕ್ರಮಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಕಡಿತಗೊಳಿಸಬಾರದು ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿದ ಹಾಸ್ಟೆಲ್ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಅದಕ್ಕೆ ಅನುದಾನ ಕಡಿತಗೊಳಿಸಬಾರದು. ಹಾಗೂ ಗ್ರಾಮೀಣ ಮೂಲ ಸೌಕರ್ಯ ಯೋಜನೆಗಳಾದ ಜಲಜೀವನ ಮಿಷನ್, ಗೃಹ ನಿರ್ಮಾಣ, ನೀರಾವರಿ ಯೋಜನೆಗಳು ಹಾಗೂ ಪಂಚಾಯತಿಗೆ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳುವುದು, ಅದೇ ರೀತಿ ರಾಜ್ಯ, ಜಿಲ್ಲಾ ರಸ್ತೆಗಳ ನಿರ್ಮಾಣ ಪ್ರಗತಿ ಮೊಟಕುಗೊಳಿಸಬಾರದು.
ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸುವುದು, ರಾಜ್ಯದ ಹಿತದೃಷ್ಟಿಯಿಂದ ಅತ್ಯಂತ ಅವಶ್ಯವಿದೆ ಎಂದಿದ್ದಾರೆ.
ಅಷ್ಟೇ ಅಲ್ಲದೇ ಗ್ರಾಮೀಣ ಮೂಲಭೂತ ಸೌಕರ್ಯ ಯೋಜನೆಗಳಾದ 'ಜಲಜೀವನ್ ಮಿಷನ್, ಗೃಹ ನಿರ್ಮಾಣ, ನೀರಾವರಿ ಯೋಜನೆ, ಪಂಚಾಯತಿಗೆ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳುವುದು. ಅದೇ ರೀತಿ ರಾಜ್ಯ, ಜಿಲ್ಲಾ ರಸ್ತೆಗಳ ನಿರ್ಮಾಣ ಪ್ರಗತಿಯನ್ನು ಮೊಟಕುಗೊಳಿಸಬಾರದು ಹಾಗೂ ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸಬೇಕು ಎಂದು ಹೇಳಿದರು.