ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಶುರು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್: ಎಚ್ಡಿ ಕುಮಾರಸ್ವಾಮಿ | JANATA NEWS
ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ಬಳಿಕ ಅವರು ಮಾತನಾಡಿ, ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಈ ಸರಕಾರ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್ ಸರಕಾರ ಎಂದು ಕರೆಯಬೇಕು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ. ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಬೇಕಿದೆ. ಸ್ವತಃ ಅಧಿಕಾರಿಗಳಲ್ಲೇ ರೇಟ್ ಫಿಕ್ಸ್ ಆಗಿದೆ ಅಂತ ಮಾತಾಡ್ತಾ ಇದ್ದಾರೆ ಎಂದು ದೂರಿದರು.
ಈಗ ಇವರು ಏನು ಮಾಡ್ತಾ ಇದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಇದನ್ನು ಸಾಬೀತು ಮಾಡಿ ಅಂದರೆ ಹೇಗೆ ಮಾಡೋದು? ಹಿಂದೆ 40% ಕಮಿಷನ್ ಆರೋಪವನ್ನು ಸಾಬೀತು ಮಾಡಿದ್ದಾರಾ? ಎಂದು ಪ್ರಶ್ನಿಸಿದ ಅವರು, ಈಗ ಅವರದೇ ಸರಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.